ADVERTISEMENT

ಪರಿಹಾರ ವಿಳಂಬ: ಎಚ್‌ಡಿಕೆ ತರಾಟೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 19:59 IST
Last Updated 2 ಸೆಪ್ಟೆಂಬರ್ 2013, 19:59 IST

ಶಿವಮೊಗ್ಗ: `ಅತಿವೃಷ್ಟಿಯಿಂದಾಗಿ ರಾಜ್ಯದ 8 ಜಿಲ್ಲೆಗಳಲ್ಲಿ  ್ಙ 3,200 ಕೋಟಿಗೂ ಹೆಚ್ಚು ಹಾನಿಯಾಗಿದೆ. ಆದರೆ, ಸರ್ಕಾರ ಇದುವರೆಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ವರದಿ ಕಳುಹಿಸಿಲ್ಲ; ರಾಜ್ಯದಿಂದಲೂ ಸಾಕಷ್ಟು ಪರಿಹಾರ ಬಿಡುಗಡೆ ಮಾಡದೇ ನಿರ್ಲಕ್ಷ್ಯ ಮಾಡಲಾಗಿದೆ' ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

`ಹಾನಿಯಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಇದುವರೆಗೂ ಭೇಟಿ ನೀಡಿಲ್ಲ. ಕೊನೆ ಪಕ್ಷ ಒಬ್ಬ ಮಂತ್ರಿಯೂ ಪರಿಶೀಲನೆ ನಡೆಸಿಲ್ಲ. ಸಂತ್ರಸ್ತ ರೈತರಿಗೆ ನೆರವಿಗೆ ಧಾವಿಸಿಲ್ಲ' ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಈ ಕುರಿತಂತೆ ಸರ್ಕಾರಕ್ಕೆ 2 ವಾರಗಳ ಗಡುವು ನೀಡಲಾಗುವುದು. ಅಷ್ಟರೊಳಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದರು.

ಕೊಳೆ ರೋಗದಿಂದ 2.20ಲಕ್ಷ ಎಕರೆ ಅಡಿಕೆ ತೋಟ ಹಾಳಾಗಿದೆ. ರೂ 800 ಕೋಟಿ ಮೌಲ್ಯದ ಅಡಿಕೆ ಬೆಳೆ ನಷ್ಟವಾಗಿದೆ. ಇದರಿಂದ 1,67,420 ಕುಟುಂಬಗಳಿಗೆ ಜೀವನಕ್ಕೆ ತೊಂದರೆಯಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.