ಹಾಸನ: ಮಂಗಳೂರಿನಿಂದ ಕಲ್ಲಡ್ಕದವರೆಗೆ ಜುಲೈ 15ರಂದು ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆಗೆ ಅಲ್ಲಿನ ಜಿಲ್ಲಾಧಿಕಾರಿ ಅನುಮತಿ ನೀಡದಿರುವುದಕ್ಕೆ ಸಂಸದ ಎಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಪಾದಯಾತ್ರೆಯನ್ನು ರಾಜಕೀಯ ಲಾಭಕ್ಕಾಗಿ ಮಾಡುತ್ತಿಲ್ಲ. ಯಾವುದೇ ಪಕ್ಷದ ಬ್ಯಾನರ್, ಪೋಸ್ಟರ್ ಹಾಕದಂತೆ ಸೂಚನೆ ನೀಡಲಾಗಿತ್ತು. ಎಲ್ಲ ಪಕ್ಷಗಳ ನಾಯಕರು, ವಿವಿಧ ಧರ್ಮಗಳ ಗುರುಗಳು, ಬುದ್ಧಿಜೀವಿಗಳು, ಸ್ವಾತಂತ್ರ್ಯ ಹೋರಾಟಗಾರರು 3 ಕಿ.ಮೀ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ನೆಪದಲ್ಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿರುವುದು ಬೇಸರ ಉಂಟು ಮಾಡಿದೆ. ಎರಡು ದಿನ ಕಾದು ನೋಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದ ಸಚಿವ ರಮಾನಾಥ್ ರೈ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಲಾಗಿದೆ. ಎಷ್ಟರ ಮಟ್ಟಿಗೆ ಫಲಪ್ರದವಾಗುತ್ತೋ ಗೊತ್ತಿಲ್ಲ ಎಂದರು.
ಸಾಮರಸ್ಯ ಸಭೆ
ಚಿತ್ರದುರ್ಗ: ‘ವಿವಿಧ ಧರ್ಮಗಳ ಧರ್ಮಗುರುಗಳು, ಮುಖಂಡರೂ ಜತೆಯಾಗಿ ಬರುವುದಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ನಡೆದ ಪ್ರದೇಶಗಳಿಗೆ ಭೇಟಿ ನೀಡಿ ಸಾಮರಸ್ಯ ಮೂಡಿಸಲು ಸಿದ್ಧರಿದ್ದೇವೆ’ ಎಂದು ಮುರುಘಾಮಠದ ಶಿವಮೂರ್ತಿ ಶರಣರು ಅಭಿಪ್ರಾಯಪಟ್ಟರು.
ಮುರುಘಾಮಠದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಸಾಮರಸ್ಯ ಮೂಡಿಸುವ ಕಾರ್ಯಕ್ರಮದ ಕುರಿತು ಎಲ್ಲ ಸ್ವಾಮೀಜಿಗಳೊಂದಿಗೆ ಮಾತನಾಡುತ್ತಿದ್ದೇವೆ. ಉಡುಪಿಯ ಪೇಜಾವರ ಶ್ರೀಗಳೊಂದಿಗೂ ಚರ್ಚಿಸಿದ ನಂತರ ಒಂದು ನಿರ್ಣಯಕ್ಕೆ ಬರುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.