ಬೆಂಗಳೂರು: ಚುನಾವಣೆ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ಬಿಡುಗಡೆ ಮಾಡುವ ಪ್ರಣಾಳಿಕೆಗಳು ಸಾರ್ವಜನಿಕರನ್ನು ಮರಳು ಮಾಡುವಂತಿರುತ್ತವೆ. ಪ್ರಣಾಳಿಕೆ ಬಿಡುಗಡೆ ಮಾಡುವ ಮುನ್ನ ರಾಜಕೀಯ ಪಕ್ಷಗಳು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು. ಗೆದ್ದು ಅಧಿಕಾರಕ್ಕೆ ಬಂದ ಐದು ವರ್ಷಗಳಲ್ಲಿ ಭರವಸೆ ಈಡೇರಿಸುವ ಪ್ರಮಾಣ ಮಾಡಬೇಕು. ಇದಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಸಂಬಂಧ ಭ್ರಷ್ಟಾಚಾರ ವಿರೋಧಿ ಭಾರತೀಯ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ರಜಾಕಾಲದ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಕೇಂದ್ರ ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ಅರ್ಜಿದಾರರ ಪರ ಸುಧಾ ವಾದ ಮಂಡಿಸಿದರು.
ಅರ್ಜಿಯ ಮುಖ್ಯಾಂಶಗಳು:
* ಪ್ರಣಾಳಿಕೆಗಳಲ್ಲಿ ಸುಳ್ಳು ಭರವಸೆ ನೀಡಿ ಮತದಾರರನ್ನು ಮೋಸ ಮಾಡಲಾಗುತ್ತಿದೆ.
* ಸಾರ್ವಜನಿಕರು ಹಾಗೂ ಮತದಾರರು ರಾಷ್ಟ್ರೀಯ ಮಾನ್ಯತೆ ಪಡೆದ ಪಕ್ಷಗಳ ಮೇಲೆ ನಂಬಿಕೆ ಕಳೆದುಕೊಂಡಿವೆ.
* ಅಧಿಕಾರಕ್ಕೆ ಬಂದಮೇಲೆ ತಾವು ನೀಡಿದ ಭರವಸೆ ಮರೆತುಬಿಡುತ್ತಾರೆ. ಆಂತರಿಕ ಕಚ್ಚಾಟದಲ್ಲಿ ಮುಳುಗುತ್ತಾರೆ.
* ಪ್ರತಿ ವರ್ಷ ಬಜೆಟ್ನಲ್ಲಿ ಘೋಷಿಸುವ ಕಾರ್ಯಕ್ರಮಗಳು ಶೇಕಡ 10ರಷ್ಟೂ ಜಾರಿಯಾಗುವುದಿಲ್ಲ.
* ಸಾರ್ವಜನಿಕರ ತೆರಿಗೆ ಹಣವನ್ನು ರಾಜಕಾರಣಿಗಳು ಲೂಟಿ ಮಾಡಿ ಕೋಟ್ಯಧಿಪತಿಗಳಾಗುತ್ತಿದ್ದಾರೆ.
* ಆದ್ದರಿಂದ ರಾಜಕೀಯ ಪಕ್ಷಗಳು ಕೋರ್ಟ್ ಮುಂದೆ ಪ್ರಮಾಣ ಪತ್ರ ಸಲ್ಲಿಸಬೇಕು. ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆ ಈಡೇರಿಸದಿದ್ದರೆ ಅವರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.