ADVERTISEMENT

ಪ್ರತ್ಯೇಕ ಧರ್ಮ: ಪ್ರಸ್ತಾವ ವಾಪಸ್‌ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2018, 19:30 IST
Last Updated 10 ಜೂನ್ 2018, 19:30 IST

ನವದೆಹಲಿ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಹಿಂದೆ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸು ಕಳಿಸುವ ಸಾಧ್ಯತೆ ಇದೆ.

ರಾಜ್ಯದಾದ್ಯಂತ ತೀವ್ರ ವಿವಾದ ಹುಟ್ಟಿ ಹಾಕಿದ್ದ ಈ ಪ್ರಸ್ತಾವನೆಯನ್ನು ಇದೀಗ ಜೆಡಿಎಸ್‌- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪುನಃ ಕೇಂದ್ರ ಸರ್ಕಾರಕ್ಕೆ ಕಳುಹಿಸುವುದು ಅನುಮಾನ.

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಕಾರಣ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ವಾಪಸು ಕಳಿಸಿ ವಿಷಯವನ್ನು ಮರುಪರಿಗಣಿಸಿ ಹೊಸ ಪ್ರಸ್ತಾವನೆ ಕಳಿಸುವಂತೆ ಸೂಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಸರ್ಕಾರ ವಿಧಾನಸಭೆ ಚುನಾವಣೆಗಳಿಗೆ ಮುನ್ನ ಕಳಿಸಿದ್ದ ಈ ಪ್ರಸ್ತಾವನೆಯನ್ನು ಕೇಂದ್ರ ಗೃಹ ಮಂತ್ರಾಲಯ ಅಧ್ಯಯನ ಮಾಡಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ರವಾನಿಸಿತ್ತು.

ರಾಜ್ಯಮಟ್ಟದಲ್ಲಿ ಈ ವಿಷಯ ಕುರಿತು ಮರುಪರಿಗಣಿಸುವ ಅಗತ್ಯವಿರುವ ಕಾರಣ ಪ್ರಸ್ತಾವನೆಯನ್ನು ವಾಪಸು ಕಳಿಸುವಂತೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಗೃಹ ಸಚಿವಾಲಯಕ್ಕೆ ಸಲಹೆ ನೀಡಿತ್ತು.

ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡುವುದರಿಂದ ಮಹಾರಾಷ್ಟ್ರದಲ್ಲಿ ಬಹುತೇಕ ಲಿಂಗಾಯತ ಸಮುದಾಯದ ಕೆಲವು ಉಪಜಾತಿಗಳಿಗೆ ನೀಡಲಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಥಾನಮಾನ ವಾಪಸು ಪಡೆಯಬೇಕಾಗಿ ಬರುತ್ತದೆ. ಈ ಅಂಶಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ ತನ್ನ ಈ ಪ್ರಸ್ತಾವನೆಯನ್ನು ಮರುಪರಿಗಣಿಸಿ ಹೊಸದಾಗಿ ಕಳಿಸುವ ಅಗತ್ಯವಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ
ಅಭಿಪ್ರಾಯಪಟ್ಟಿದೆ.

ಕಡತ ವಾಪಸ್‌ ಬಂದಿಲ್ಲ: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿ ಕಳುಹಿಸಿದ ಕಡತ, ಕೇಂದ್ರದಿಂದ ಬಂದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.