ADVERTISEMENT

ಪ್ರಥಮ ಹಂತ ಚುನಾವಣೆ ಪ್ರಚಾರ ಚುರುಕು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2010, 9:00 IST
Last Updated 21 ಡಿಸೆಂಬರ್ 2010, 9:00 IST

ಬೆಂಗಳೂರು: ಮೊದಲ ಹಂತದ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲು ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು, ಇದೇ 26ರಂದು ಭಾನುವಾರ ಚುನಾವಣೆ ನಡೆಯುವ 12 ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ಚುರುಕುಗೊಂಡಿದೆ.

ಶುಕ್ರವಾರ ಬೆಳಿಗ್ಗೆ 7ಕ್ಕೆ 12 ಜಿಲ್ಲೆಗಳಲ್ಲಿ ಬಹಿರಂಗ ಪ್ರಚಾರ ಕೊನೆಗೊಳ್ಳಲಿದ್ದು, ಮತದಾನ ಆರಂಭಕ್ಕೂ ಹಿಂದಿನ 48 ಗಂಟೆಗಳಲ್ಲಿ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭ ನಡೆಸಲು ಅವಕಾಶವಿಲ್ಲ. ಆದರೆ ಕಣದಲ್ಲಿರುವ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ 374 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಮತ್ತು 1335 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಜಿಲ್ಲಾ ಪಂಚಾಯಿತಿ ಚುನಾವಣೆಗೆ 1549 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಕಾಂಗ್ರೆಸ್‌ನ 365, ಬಿಜೆಪಿಯ 369, ಜೆಡಿಎಸ್ 338 ಹಾಗೂ 382 ಮಂದಿ ಪಕ್ಷೇತರರು ಕಣದಲ್ಲಿರುವ ಪ್ರಮುಖರಾಗಿದ್ದಾರೆ. ಇದಲ್ಲದೆ ಬಿಎಸ್‌ಪಿ- 66, ಸಿಪಿಐ- 6, ಸಿಪಿಎಂ- 17 ಹಾಗೂ ಎನ್‌ಸಿಪಿಗೆ ಸೇರಿದ ಆರು ಮಂದಿ ಕಣದಲ್ಲಿದ್ದಾರೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಬೆಂಗಳೂರು ನಗರ ಜಿಲ್ಲೆಯ ಒಂದು ಜಿ.ಪಂ. ಕ್ಷೇತ್ರದಲ್ಲಿ ಹಾಗೂ ನಾಲ್ಕು ತಾ.ಪಂ. ಕ್ಷೇತ್ರಗಳು, ಕೋಲಾರ ಮತ್ತು ತುಮಕೂರಿನ ತಲಾ ಒಂದು ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆದಿದೆ.

ಸೋಮವಾರ ಅಂತ್ಯ: ಎರಡನೇ ಹಂತದಲ್ಲಿ ನಡೆಯುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಸೋಮವಾರ ಅಂತ್ಯಗೊಂಡಿದ್ದು, ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 17 ಜಿಲ್ಲೆಗಳ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಇದೇ 31ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜನವರಿ ಒಂದರಂದು ಗುಲ್ಬರ್ಗ ಜಿ.ಪಂ. ಮತ್ತು ಆ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.