ADVERTISEMENT

ಪ್ರಾಧಿಕಾರದಿಂದಲೇ ವಿಜಾಪುರ ವಿಮಾನ ನಿಲ್ದಾಣ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2013, 19:30 IST
Last Updated 13 ಡಿಸೆಂಬರ್ 2013, 19:30 IST

ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವೇ  ವಿಜಾಪುರ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ­ಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಮೂಲ­­ಸೌಲಭ್ಯ ಅಭಿವೃದ್ಧಿ ಸಚಿವ ಎಸ್‌.ಆರ್‌.ಪಾಟೀಲ್‌ ಶುಕ್ರವಾರ ಇಲ್ಲಿ ತಿಳಿಸಿದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ­ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ನಾಮಕರಣ ಮತ್ತು ನೂತನ ಟರ್ಮಿನಲ್‌ ಉದ್ಘಾಟನೆ ಬಗ್ಗೆ  ಮಾಹಿತಿ ನೀಡಲು ಕರೆದಿದ್ದ ಪತ್ರಿಕಾ­ಗೋಷ್ಠಿಯಲ್ಲಿ ಸಚಿವರು ಈ ವಿಷಯ ತಿಳಿಸಿದರು.

‘ಮಾರ್ಗ’ ಎಂಬ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಈ ಮೊದಲು ಒಪ್ಪಂದ­ವಾಗಿ­ತ್ತು. ಆದರೆ, ಆ ಸಂಸ್ಥೆ ನಿರ್ಮಾಣಕ್ಕೆ ಹಿಂದೇಟು ಹಾಕುತ್ತಿದ್ದು, ಅದನ್ನು ವಿಮಾನ ನಿಲ್ದಾಣ ಪ್ರಾಧಿಕಾರ­ವೇ ನಿರ್ಮಾಣ ಮಾಡಲು ಮುಂದೆ ಬಂದಿದೆ ಎಂದು ವಿವರಿಸಿದರು.

ವಿಮಾನ ನಿಲ್ದಾಣ ಸಲುವಾಗಿ 700 ಎಕರೆ ಜಾಗವನ್ನು ಸರ್ಕಾರ ಗುರುತಿ­ಸಿದ್ದು, ಅಲ್ಲಿ ಹೆಚ್ಚಾಗಿ ಬೆಟ್ಟಗುಡ್ಡಗಳು ಇವೆ.  ಅದನ್ನು ಸಮತಟ್ಟು ಮಾಡಲು ಸುಮಾರು ರೂ 100 ಕೋಟಿ ಖರ್ಚಾ­ಗುವ ಸಾಧ್ಯತೆ ಇದೆ. ಹೀಗಾಗಿ ಕನಿಷ್ಠ ಶೇ 50ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಯೋಜನೆ ಕೈಗೆತ್ತಿಕೊಳ್ಳುವು­ದಾಗಿ ಪ್ರಾಧಿಕಾರ ತಿಳಿಸಿತ್ತು. ಆ ಪ್ರಕಾರ ರೂ50 ಕೋಟಿ ನೀಡಲು ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದು ಅವರು
ಹೇಳಿದರು.

ಗುಲ್ಬರ್ಗ ವಿಮಾನ ನಿಲ್ದಾಣದ ಕಾಮ­­ಗಾರಿ ಶೇ 80ರಷ್ಟು ಪೂರ್ಣ­ಗೊಂಡಿದೆ. ಬಾಕಿ ಕಾಮಗಾರಿಯನ್ನು ಮುಗಿಸಲು ಸಂಬಂಧಪಟ್ಟ ಗುತ್ತಿಗೆದಾರ­ರು ಮುಂದೆ ಬರುತ್ತಿಲ್ಲ. ಹೀಗಾಗಿ ಅದನ್ನು ಹೇಗಾ­ದರೂ ಮಾಡಿ ಪೂರ್ಣಗೊಳಿ­ಸಲು ನಿರ್ಧರಿಸಿದ್ದು, ಅದರ ಬಳಿಕ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ಕೂಡ ಇದುವರೆಗೂ ಅನುಷ್ಠಾನಕ್ಕೆ ಬಂದಿಲ್ಲ. ಹೀಗಾಗಿ ಸಂಬಂಧಪಟ್ಟ ಗುತ್ತಿಗೆದಾರ ಸಂಸ್ಥೆ ಜತೆಗಿನ ಒಪ್ಪಂದವನ್ನು ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.