ADVERTISEMENT

ಬಂಟ್ವಾಳ: ನಿಷೇಧಾಜ್ಞೆ ನಡುವೆಯೇ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2017, 19:44 IST
Last Updated 7 ಜುಲೈ 2017, 19:44 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿ ಶುಕ್ರವಾರ ಪ್ರತಿಭಟನಾ ನಿರತರು ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ಅವರನ್ನು ಎತ್ತಿ ಹಿಡಿದರು
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿ ಶುಕ್ರವಾರ ಪ್ರತಿಭಟನಾ ನಿರತರು ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ಅವರನ್ನು ಎತ್ತಿ ಹಿಡಿದರು   

ಬಂಟ್ವಾಳ: ಶರತ್ ಮಡಿವಾಳ ಅವರ ಹತ್ಯೆಗೆ ನಡೆದ ಯತ್ನ ಮತ್ತು ಹಿಂದೂಗಳ ಮೇಲೆ ನಡೆಯುತ್ತಿದೆ ಎನ್ನಲಾದ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ  ಶುಕ್ರವಾರ ನಿಷೇಧಾಜ್ಞೆ ನಡುವೆಯೇ  ಪ್ರತಿಭಟನೆ ನಡೆಸಲಾಯಿತು.

ನಿಷೇಧಾಜ್ಞೆ ಉಲ್ಲಂಘಿಸಿದ ಸಂಸದರಾದ ನಳಿನ್ ಕುಮಾರ್ ಕಟೀಲ್‌, ಶೋಭಾ ಕರಂದ್ಲಾಜೆ, ಶಾಸಕ ವಿ.ಸುನಿಲ್‌ ಕುಮಾರ್ ಸೇರಿ 30 ಮಂದಿಯನ್ನು ಬಂಧಿಸಲಾಯಿತು. 800ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಯಿತು. ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಇದ್ದರೂ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನೆ ನಡೆಸಿದ ಕಾರಣ ಶುಕ್ರವಾರ ಬೆಳಿಗ್ಗೆ ಇಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು.

ಐದಕ್ಕಿಂತ ಹೆಚ್ಚು ಮಂದಿ ಒಂದೆಡೆ ಸೇರಬಾರದು ಎಂದು ಧ್ವನಿವರ್ಧಕದಲ್ಲಿ ಹೇಳುತ್ತಿದ್ದಾಗಲೇ ಸ್ಥಳದಲ್ಲಿ ದೊಡ್ಡ ಗುಂಪು ಸೇರಿತ್ತು. ಬಸ್‌ ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು. ಪ್ರತಿಭಟನಾಕಾರರ ನಡುವೆಯೇ ಸಂಸದರು ಧ್ವನಿವರ್ಧಕ ಇಲ್ಲದೆಯೇ ಭಾಷಣ ಮಾಡಿದರು. ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಂತೆಯೇ ಪ್ರತಿಭಟನಾಕಾರರ ಜೈಕಾರ ಹೆಚ್ಚಾಯಿತು. ಭಟ್ ಅವರನ್ನು ಪ್ರತಿಭಟನಾಕಾರರು ಎತ್ತಿ ಹಿಡಿದು ಪ್ರದರ್ಶಿಸಿದರು. ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಕಲ್ಲಡ್ಕಗೆ ಕೊಲೆ ಬೆದರಿಕೆ: ಕ್ರಮಕ್ಕೆ ಶೋಭಾ ಆಗ್ರಹ
ಬೆಂಗಳೂರು:
ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ‘ಮಂಗಳೂರು ಮುಸ್ಲಿಂ’ ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳು ಕಾರಣವಾಗಿವೆ. ಬಿ.ಸಿ. ರೋಡ್‌ನಲ್ಲಿ ನಡೆದ ಹಲ್ಲೆಯಿಂದ ಗಾಯಗೊಂಡಿದ್ದ ಶರತ್‌ ಮೃತಪಟ್ಟಿರುವುದು ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಕನ್ನಡಿಯಂತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.