ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಮುಖಂಡ ಎನ್. ಮುತ್ತಪ್ಪ ರೈ ಅವರ ಖಾಸಗಿ ಭದ್ರತಾ ಸಿಬ್ಬಂದಿಯ ಬಂದೂಕುಗಳನ್ನು ಸರ್ಕಾರಕ್ಕೆ ಶರಣಾಗಿಸಬೇಕು ಎಂಬ ಒತ್ತಾಯ ಮಾಡಬಾರದು ಎಂದು ಹೈಕೋರ್ಟ್ ಸೋಮವಾರ ಮಧ್ಯಾಂತರ ಆದೇಶ ನೀಡಿದೆ. ‘ನಾನು ಖಾಸಗಿ ಭದ್ರತಾ ಸಿಬ್ಬಂದಿ ಹೊಂದಿದ್ದೇನೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವ ಕಾರಣ, ಬಂದೂಕು ಹೊಂದಿರುವವರು ಅದನ್ನು ಸರ್ಕಾರಕ್ಕೆ ಒಪ್ಪಿಸಬೇಕು ಎಂಬ ಸೂಚನೆ ಬಂದಿದೆ. ನನಗೆ ಜೀವ ಬೆದರಿಕೆ ಇರುವ ಕಾರಣ, ಪೊಲೀಸ್ ಭದ್ರತೆ ಕಲ್ಪಿಸಬೇಕು’ ಎಂದು ರೈ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ನಡೆಸಿದರು. ‘ರೈ ಅವರಿಗೆ ಈ ಸಂದರ್ಭದಲ್ಲಿ ಪೊಲೀಸ್ ಭದ್ರತೆ ನೀಡಲು ಸಾಧ್ಯವಿಲ್ಲ’ ಎಂದು ಸರ್ಕಾರಿ ವಕೀಲ ವಿಜಯಕುಮಾರ್ ಪಾಟೀಲ ಅವರು ಪೀಠಕ್ಕೆ ತಿಳಿಸಿದರು. ಇದನ್ನು ದಾಖಲು ಮಾಡಿಕೊಂಡ ಪೀಠ, ‘ರೈ ಅವರ ಖಾಸಗಿ ಭದ್ರತಾ ಸಿಬ್ಬಂದಿಯ ಬಂದೂಕುಗಳನ್ನು ಹಸ್ತಾಂತರ ಮಾಡುವಂತೆ 3 ತಿಂಗಳ ಕಾಲ ಒತ್ತಾಯಿಸಬೇಡಿ’ ಎಂದು ಸರ್ಕಾರಕ್ಕೆ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.