ಬೆಂಗಳೂರು: ವಿಶ್ವ ಕನ್ನಡ ಸಮ್ಮೇಳನದ ನೆಪದಲ್ಲಿ ವಿಧಾನಮಂಡಲದ ಬಜೆಟ್ ಅಧಿವೇಶನವನ್ನು ಮಾರ್ಚ್ 10ಕ್ಕೆ ಮೊಟಕುಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುನ್ನಾರ ನಡೆಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಬುಧವಾರ ತಮ್ಮ ಅಧಿಕೃತ ನಿವಾಸದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸದನಕ್ಕೆ ಬನ್ನಿ ಚರ್ಚೆ ಮಾಡೋಣ ಎಂದು ಆಹ್ವಾನ ನೀಡುವ ಮುಖ್ಯಮಂತ್ರಿ ಈಗ ಸಮ್ಮೇಳನದ ನೆಪ ಹೇಳಿ ತಪ್ಪಿಸಿಕೊಂಡು ಹೋಗಲು ಯತ್ನಿಸುತ್ತಿದ್ದಾರೆ’ ಎಂದು ದೂರಿದರು.
‘ಬಜೆಟ್ಗೆ ಸದನದ ಒಪ್ಪಿಗೆ ಪಡೆದ ಬಳಿಕ ಗಣಿ ಹಗರಣ, ಭೂ ಹಗರಣ ಮತ್ತಿತರ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಸದನದಲ್ಲಿ ಚರ್ಚಿಸಲು ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ಯಡಿಯೂರಪ್ಪ ಅವರೇ ಹಿಂದೆ ಈ ಬಗ್ಗೆ ಪಂಥಾಹ್ವಾನ ನೀಡಿದ್ದರು. ಆದರೆ ಈಗ ವಿಶ್ವ ಕನ್ನಡ ಸಮ್ಮೇಳನದ ಹೆಸರಿನಲ್ಲಿ ಚರ್ಚೆಗೆ ಅವಕಾಶ ನೀಡದಿರುವ ಪ್ರಯತ್ನಕ್ಕೆ ಕೈಹಾಕಿದ್ದಾರೆ’ ಎಂದರು. ‘ಮಾರ್ಚ್ 10ಕ್ಕೆ ಅಧಿವೇಶನ ಅಂತ್ಯಗೊಳಿಸುವ ಬಗ್ಗೆ ಹಿಂದೆ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದರು.
ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಅದನ್ನು ವಿರೋಧಿಸಿದ್ದವು. ಈಗ ಮತ್ತೆ ಅದೇ ವಿಷಯದ ಬಗ್ಗೆ ಶಾಸಕರಿಂದ ಸಹಿ ಸಂಗ್ರಹಿಸುತ್ತಿದ್ದಾರೆ. ಇದು ಚರ್ಚೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ’ ಎಂದು ಸಿದ್ದರಾಮಯ್ಯ ಆಪಾದಿಸಿದರು. ‘ಗುರುವಾರ ಕಲಾಪ ಸಲಹಾ ಸಮಿತಿ ಸಭೆ ನಡೆಯಲಿದೆ. ಸದನವನ್ನು ಅರ್ಧಕ್ಕೆ ಮೊಟಕುಗೊಳಿಸುವುದನ್ನು ನಾವು ವಿರೋಧಿಸುತ್ತೇವೆ. ಸಮ್ಮೇಳನದ ಅವಧಿಯಲ್ಲಿ ಸದನಕ್ಕೆ ರಜೆ ನೀಡಲಿ. ಮಾರ್ಚ್ 20ರವರೆಗೆ ಅಧಿವೇಶನ ನಡೆಸಲಿ. ಹಗರಣಗಳು ಸೇರಿದಂತೆ ಹಲವು ವಿಷಯಗಳ ಚರ್ಚೆ ನಡೆಯಲೇಬೇಕು. ಈ ಬಗ್ಗೆ ವಿರೋಧ ಪಕ್ಷಗಳು ಪಟ್ಟು ಹಿಡಿಯಲಿವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.