ADVERTISEMENT

ಬರಕ್ಕೆ ಕೇಂದ್ರದ ನೆರವು: ಭರವಸೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2012, 19:30 IST
Last Updated 8 ಏಪ್ರಿಲ್ 2012, 19:30 IST

ಬೆಂಗಳೂರು: ತಕ್ಷಣವೇ ಬರ ಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ವರದಿ ನೀಡಿದಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ದೊರಕಿಸಲು ಪ್ರಯತ್ನಿಸುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಕೇಂದ್ರದ ಸಚಿವರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಸ್ಥಳೀಯ ಮುಖಂಡರಿಗೆ ಭರವಸೆ ನೀಡಿದರು.

ಕೆಪಿಸಿಸಿ ವತಿಯಿಂದ ಗೊಲ್ಲರಹಟ್ಟಿಯಲ್ಲಿ ಹಮ್ಮಿಕೊಂಡಿದ್ದ `ಕಾಂಗ್ರೆಸ್‌ಗೆ ಬನ್ನಿ-ಬದಲಾವಣೆ ತನ್ನಿ~ ಅಭಿಯಾನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂಧನ ಮಿಸ್ತ್ರಿ, ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಆಸ್ಕರ್ ಫರ್ನಾಂಡಿಸ್ ಮತ್ತು ಬಿ.ಕೆ.ಹರಿಪ್ರಸಾದ್ ಈ ವಾಗ್ದಾನ ನೀಡಿದರು.

1 ತಿಂಗಳ ಮಟ್ಟಿಗೆ ಅಭಿಯಾನವನ್ನು ಸ್ಥಗಿತಗೊಳಿಸಬೇಕೆಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೀಡಿರುವ ಸೂಚನೆಯನ್ನು ಸ್ಮರಿಸಿದ ಈ ನಾಯಕರು, `ತಕ್ಷಣವೇ ಬರಪೀಡಿತ ಪ್ರದೇಶಗಳಿಗೆ ತೆರಳಿ ವಾಸ್ತವಿಕ ಸ್ಥಿತಿಯ ಬಗ್ಗೆ ಅಧ್ಯಯನ ವರದಿ ಸಿದ್ಧಪಡಿಸಿ. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ. ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ಪಡೆಯುವ ಪ್ರಯತ್ನದಲ್ಲಿ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ~ ಎಂದರು.

ಇದೇ 10ರಿಂದ 20ರವರೆಗೆ 3 ತಂಡಗಳು ರಾಜ್ಯದ 24 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿವೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ ಹಾಗೂ ತಮ್ಮ ನೇತೃತ್ವದಲ್ಲಿ ಈ ತಂಡಗಳ ಪ್ರವಾಸ ನಡೆಯಲಿದೆ. ಇದೇ 28ರಂದು ತುಮಕೂರು ಸಿದ್ದಗಂಗಾ ಮಠಕ್ಕೆ ಆಗಮಿಸುವ ಸೋನಿಯಾ ಅವರಿಗೆ ವರದಿ ಸಲ್ಲಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.