ADVERTISEMENT

ಬರ: 432 ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ಬೆಂಗಳೂರು: ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಗಂಭೀರವಾಗಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸುವ ಗ್ರಾಮಗಳ ಸಂಖ್ಯೆ 432ಕ್ಕೆ ಏರಿದೆ.

ಕಳೆದ ವಾರ 296 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿತ್ತು. ಆದರೆ ಒಂದೇ ವಾರದಲ್ಲಿ 432ಕ್ಕೆ ಏರಿದ್ದು, ಎಲ್ಲ ಕಡೆ ನೀರು ಮತ್ತು ಮೇವಿಗಾಗಿ ಬೇಡಿಕೆ ಬರುತ್ತಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ಬುಧವಾರದ ಮಾಹಿತಿ ಪ್ರಕಾರ 3,29,415 ಜನರಿಗೆ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗಿದೆ. 47 ಗೋಶಾಲೆಗಳನ್ನು ತೆರೆಯಲಾಗಿದ್ದು, 38 ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ಬರ ಪರಿಹಾರ ಕಾರ್ಯಗಳಿಗೆ ಇದುವರೆಗೆ 369.69 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದು, ಜಿಲ್ಲಾಧಿಕಾರಿಗಳ ಬಳಿ ಇನ್ನೂ 178.85 ಕೋಟಿ  ಅನುದಾನ ಲಭ್ಯವಿದೆ.

ಕೆಲ ಜಿಲ್ಲೆಗಳಿಂದ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ 15 ಕೋಟಿ ರೂ.ಹಣ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. 12 ಸಚಿವರನ್ನು ಒಳಗೊಂಡ ಮೂರು ತಂಡಗಳು ಪ್ರತ್ಯೇಕವಾಗಿ ಕಳೆದ ಮೂರು ದಿನಗಳಿಂದ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದವು. ಪ್ರವಾಸ ಸಂದರ್ಭದಲ್ಲಿ ಜನರಿಂದ ಬಂದ ಬೇಡಿಕೆಗಳು, ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿ ಕುರಿತು ಸಚಿವರು ಗುರುವಾರ ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.