ADVERTISEMENT

ಬಾಲಕಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2012, 19:30 IST
Last Updated 3 ಡಿಸೆಂಬರ್ 2012, 19:30 IST

ಹಾಸನ: ಆರನೇ ತರಗತಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಬಂದಿದ್ದ ಜನರ ಮೇಲೆಯೇ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಲಾಠಿ ಪ್ರಹಾರ ನಡೆಸಿದ್ದರಿಂದ ಆಕ್ರೋಶಗೊಂಡ ಜನರು ಸಬ್‌ಇನ್‌ಸ್ಪೆಕ್ಟರ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಹಾಸನದಲ್ಲಿ ಸೋಮವಾರ ನಡೆದಿದೆ.

ಇಲ್ಲಿನ ಸಂತೆಪೇಟೆ ಸರ್ಕಾರಿ ಪ್ರೌಢಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿಗೆ ಶಿಕ್ಷಕ ರಾಜಪ್ಪ ಕಳೆದ ಗುರುವಾರ ಲೈಂಗಿಕ ಕಿರುಕುಳ ನೀಡಿದ್ದರು. ಈ ವಿಚಾರ ತಡವಾಗಿ ಪಾಲಕರಿಗೆ ತಿಳಿಯಿತು. ಸೋಮವಾರ ನೂರಾರು ಜನರು ಬಂದು ಶಾಲೆ ಮುಂದೆ ಪ್ರತಿಭಟನೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೆನ್‌ಶನ್ ಮೊಹಲ್ಲಾ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಮೋಹನ ಕುಮಾರ್, ಪ್ರತಿಭಟನೆಯಲ್ಲಿ ತೊಡಗಿದ್ದ ಇಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದರು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಜನರು ಶಾಲಾ ಆವರಣದಿಂದ ಪೊಲೀಸ್ ಠಾಣೆಗೆ ಬಂದು ಪ್ರತಿಭಟನೆ ಆರಂಭಿಸಿದರು. ಶಾಸಕ ಎಚ್.ಎಸ್. ಪ್ರಕಾಶ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಬಾಲಕಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ಬಸವರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT