ADVERTISEMENT

ಬಾಲಕೃಷ್ಣೇಗೌಡ ಅಕ್ರಮ ಆಸ್ತಿ: ತನಿಖೆ ಮುಕ್ತಾಯಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 19:30 IST
Last Updated 10 ಅಕ್ಟೋಬರ್ 2011, 19:30 IST

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರ ಹಿರಿಯ ಪುತ್ರ ಎಚ್.ಡಿ.ಬಾಲಕೃಷ್ಣೇಗೌಡ ಅವರು ಸರ್ಕಾರಿ ಸೇವೆಯಲ್ಲಿದ್ದಾಗ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಕುರಿತು ಇದೇ 26ರ ಒಳಗೆ  ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

ಭದ್ರಾವತಿ ಮೂಲದ ಎಸ್.ಎನ್. ಬಾಲಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ತನಿಖೆಯನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿದೆ. ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್. ಕೆ. ಸುಧೀಂದ್ರ ರಾವ್, ವರದಿ ಸಲ್ಲಿಕೆಗೆ ಅ. 26ರ ಗಡುವು ನೀಡಿದರು.

ಪ್ರಕರಣದ ತನಿಖಾಧಿಕಾರಿಯಾಗಿರುವ ಲೋಕಾಯುಕ್ತ ಡಿವೈಎಸ್‌ಪಿ ಪ್ರಸನ್ನ ವಿ.ರಾಜು ಅವರನ್ನು ವಿಚಾರಣೆ ಆರಂಭದಲ್ಲೇ ಪ್ರಶ್ನಿಸಿದ ನ್ಯಾಯಾಧೀಶರು, ತನಿಖೆಯ ಪ್ರಗತಿ ವಿವರ ಕೇಳಿದರು. `ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದೆ~ ಎಂದು ತನಿಖಾಧಿಕಾರಿ ನೀಡಿದ ಉತ್ತರದಿಂದ ಸಮಾಧಾನಗೊಳ್ಳದ ಅವರು, `ಯಾವ ದಾಖಲೆಗಳನ್ನು ಪರಿಶೀಲಿಸುತ್ತಿದ್ದೀರಿ? ನ್ಯಾಯಾಲಯ ನೀಡಿರುವ ದಾಖಲೆಗಳೋ? ನೀವು ಯಾವುದಾದರೂ ಪತ್ತೆಹಚ್ಚಿದ್ದೀರಾ?~ ಎಂದರು.

ADVERTISEMENT

ದೂರಿನ ಪ್ರತಿಯೊಂದಿಗೆ ಸಲ್ಲಿಸಿರುವ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಡಿವೈಎಸ್‌ಪಿ ಉತ್ತರಿಸಿದಾಗ `ನ್ಯಾಯಾಲಯ ನೀಡಿರುವ ದಾಖಲೆಗಳನ್ನು ಪರಿಶೀಲಿಸಿ ತನಿಖೆ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳಬಾರದು ಎಂದು ಸೂಚಿಸಿದರು.

ಶೀಘ್ರಗತಿಯಲ್ಲಿ ತನಿಖೆ ಪೂರ್ಣಗೊಳಿಸಿ, ವರದಿ ಸಲ್ಲಿಸಿ~ ಎಂದು ಸೂಚನೆ ನೀಡಿದರು.

ಬಳಿಕ, ಅ. 22ಕ್ಕೆ ತನಿಖಾ ವರದಿ ಸಲ್ಲಿಸುವುದಾಗಿ ತನಿಖಾಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದರು. ನಂತರ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಅ. 26ಕ್ಕೆ ವಿಚಾರಣೆಯನ್ನು ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.