ADVERTISEMENT

ಬಿಎಸ್‌ಆರ್ ಕಾಂಗ್ರೆಸ್ ಸಭೆಯಲ್ಲಿ ಮಾರಾಮಾರಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2012, 19:59 IST
Last Updated 19 ಡಿಸೆಂಬರ್ 2012, 19:59 IST

ಶಿವಮೊಗ್ಗ: ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಪ್ರಮುಖರ ಸಭೆಯಲ್ಲಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಈ ಅಹಿತಕರ ಘಟನೆಯಿಂದ ಗೊಂದಲದ ವಾತಾವರಣ ನಿರ್ಮಾಣಗೊಂಡು ಸಭೆ ಅರ್ಧಕ್ಕೇ ಮೊಟಕುಗೊಂಡಿತು. ಕಾರ್ಯಕರ್ತರು ಪರಸ್ಪರ ಮಾರಾಮಾರಿ ನಡೆಸಿದ್ದರಿಂದ ಸ್ಥಳದಲ್ಲಿ ಕೆಲ ಸಮಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಬಿಎಸ್‌ಆರ್ ಸಂಸ್ಥಾಪಕ ಅಧ್ಯಕ್ಷ ಶ್ರೀರಾಮುಲು ಶಿವಮೊಗ್ಗ ಜಿಲ್ಲಾ ಪ್ರವಾಸ ಸದ್ಯದಲ್ಲೇ ಕೈಗೊಳ್ಳುತ್ತಿದ್ದು, ಈ ವೇಳೆ ಪಕ್ಷದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೋಟೆಲ್ ಸಭಾಂಗಣದಲ್ಲಿ ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು.

ಸಭೆಗೆ ಪಕ್ಷದ ಕೋರ್ ಕಮಿಟಿ ಸದಸ್ಯ ವಿರೂಪಾಕ್ಷಪ್ಪ ಆಗಮಿಸಿದ್ದರು. ಸಭೆ ಆರಂಭವಾಗುತ್ತಿದ್ದಂತೆ ಭದ್ರಾವತಿ ತಾಲ್ಲೂಕಿನ ಕೆಲ ಪದಾಧಿಕಾರಿಗಳ ನೇಮಕದ ಬಗ್ಗೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

ನಿಷ್ಠಾವಂತ, ಪ್ರಾಮಾಣಿಕರನ್ನು ಕಡೆಗಣಿಸಲಾಗಿದೆ. ಜಿಲ್ಲಾ ಸಂಚಾಲಕರು ಅದಕ್ಷರಿಗೆ ಮಣೆ ಹಾಕುತ್ತಿದ್ದಾರೆ. ಇವರಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಸಾಧ್ಯವಿಲ್ಲ ಎಂದು ಕೆಲ ಕಾರ್ಯಕರ್ತರು ಆಕ್ರೋಶದಿಂದ ಹೇಳಿದರು. ಈ ಸಂದರ್ಭದಲ್ಲಿಮತ್ತೊಂದು ಗುಂಪು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ತಳ್ಳಾಡಿಕೊಂಡರು.

ಕೆಲ ಉದ್ರಿಕ್ತ ಕಾರ್ಯಕರ್ತರು ಪ್ಲಾಸ್ಟಿಕ್ ಕುರ್ಚಿಗಳನ್ನು ತೂರಾಡಿದರು. ಇದರಿಂದ ಹೋಟೆಲ್ ಸಭಾಂಗಣದ ಕಿಟಕಿ ಗಾಜು ಒಡೆಯಿತು. ಹಲವು ಕುರ್ಚಿಗಳು ಜಖಂಗೊಂಡವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.