ADVERTISEMENT

ಬಿಎಸ್‌ವೈ ಕುತ್ತಿಗೆಗೆ ಸಿಬಿಐ ಕುಣಿಕೆ

​ಪ್ರಜಾವಾಣಿ ವಾರ್ತೆ
Published 11 ಮೇ 2012, 5:20 IST
Last Updated 11 ಮೇ 2012, 5:20 IST

ನವದೆಹಲಿ: ಭ್ರಷ್ಟಾಚಾರದ ಆರೋಪಕ್ಕೆ ಒಳಗಾಗಿ ಮುಖ್ಯಮಂತ್ರಿ ಪದವಿಯನ್ನು ಕಳೆದುಕೊಂಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ ~ಗಣಿಕಪ್ಪ~ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐ ತನಿಖೆಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ತ್ರಿಸದಸ್ಯ ಅರಣ್ಯ ಪೀಠ ಬಿಎಸ್ ವೈ ಅವರ ಪ್ರಕರಣದ ವಿಚಾರಣೆಯನ್ನು ಆಲಿಸಿ ಸಿಬಿಐ ತನಿಖೆಗೆ ಸೂಚನೆ ನೀಡಿತು. 

ಪ್ರಕರಣದ ತನಿಖೆಯ ವರದಿಯನ್ನು ಆ. 3ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ವಿಶೇಷ ಅರಣ್ಯ ಪೀಠವು ಸಿಬಿಐಗೆ ಆದೇಶಿಸಿದೆ. ಇದಲ್ಲದೇ  ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಹಕರಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಪೀಠವು ಸೂಚಿಸಿದೆ.
 
ಇದೀಗ ಸಿಬಿಐ, ಬಿಎಸ್‌ವೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಸಿಬಿಐ ಆದೇಶದ ಪ್ರತಿಗಾಗಿ ಕಾಯುತ್ತಿದೆ.

ಬಂಧನದ ಭೀತಿ: ಸುಪ್ರೀಂ ಕೋರ್ಟ್ ನ ಈ ಆದೇಶದಿಂದಾಗಿ ಮತ್ತೆ ಬಿಎಸ್‌ವೈ ಕುಟುಂಬವು ಬಂಧನದ ಭೀತಿಗೆ ಒಳಗಾಗಿದೆ. 

ಬಿಎಸ್ ವೈ ಸ್ವಾಗತ: ~ಸುಪ್ರೀಂ ಕೋರ್ಟ್ ಆದೇಶವನ್ನು ನಾನು ಸಂಪೂರ್ಣವಾಗಿ ಸ್ವಾಗತಿಸುತ್ತೇನೆ~ ಎಂದು ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ನಂಜನಗೂಡಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ಸದಸ್ಯರು ಮತ್ತು ಜಿಂದಾಲ್ ಸಮೂಹದ ಸೌತ್‌ವೆಸ್ಟ್ ಮೈನಿಂಗ್ ಕಂಪನಿ ನಡುವಣ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಹಿರಿಯ ಸಲಹೆಗಾರ ಎಸ್.ಆರ್.ಹಿರೇಮಠ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ನೇತೃತ್ವದ ಪರಿಸರ ಪೀಠದ ಮುಂದೆ ಸಿಇಸಿಯ ಅಧಿಕಾರಿಗಳು ವರದಿಯನ್ನು ಸಲ್ಲಿಸಿದ್ದರು.

ಇದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಅವರನ್ನು ಒಳಗೊಂಡ ತ್ರಿಸದಸ್ಯ ಅರಣ್ಯ ಪೀಠ ಸಿಇಸಿ ವರದಿಯನ್ನು ಪುರಸ್ಕರಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.