ADVERTISEMENT

ಬಿಎಸ್‌ವೈ ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2012, 19:30 IST
Last Updated 24 ಮಾರ್ಚ್ 2012, 19:30 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರರ ವಿರುದ್ಧ ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ಎರಡು, ಮೂರು ಹಾಗೂ ನಾಲ್ಕನೇ ಖಾಸಗಿ ದೂರುಗಳ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಏಪ್ರಿಲ್ 18ಕ್ಕೆ ಮುಂದೂಡಿದೆ.

ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಎದುರಿನ ಗಾಂಧಿ ಭವನದಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಶನಿವಾರ ಮೂರೂ ದೂರುಗಳ ವಿಚಾರಣೆ ನಡೆಯಿತು. ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಆರ್.ಎನ್.ಸೋಹನ್‌ಕುಮಾರ್, ಶಾಸಕರಾದ ಎಸ್.ಎನ್.ಕೃಷ್ಣಯ್ಯ ಶೆಟ್ಟಿ, ಡಾ.ಡಿ.ಹೇಮಚಂದ್ರ ಸಾಗರ್ ಸೇರಿದಂತೆ ಎಲ್ಲ ಆರೋಪಿಗಳೂ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಮೂರೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷಿದಾರರ ಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಹಿಂದೆಯೇ ಆದೇಶಿಸಿತ್ತು. ಆದರೆ, ದೂರುದಾರರು ಶನಿವಾರ ಕೂಡ ಪಟ್ಟಿಯನ್ನು ಸಲ್ಲಿಸಲಿಲ್ಲ. ಸಾಕ್ಷಿದಾರರ ಪಟ್ಟಿಯನ್ನು ಶೀಘ್ರದಲ್ಲಿ ಸಲ್ಲಿಸುವಂತೆ ಆದೇಶ ಹೊರಡಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ಮೂರೂ ದೂರುಗಳ ವಿಚಾರಣೆಯನ್ನೂ ಏ.18ಕ್ಕೆ ಮುಂದೂಡಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.