ADVERTISEMENT

ಬಿಜೆಪಿ ಅಭ್ಯರ್ಥಿ ಸೇರಿ ನಾಲ್ವರಿಂದ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ಕೊಪ್ಪಳ:  ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ 4 ಜನ ಅಭ್ಯರ್ಥಿಗಳು ಒಟ್ಟು 6 ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಇಂದು ಶುಭ ದಿನ ಎಂಬ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲಾಗಿದೆ.
 
ಸೆ. 9ರಂದು ಬಿ ಫಾರ್ಮ್‌ನೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸುವೆ ಎಂದು ಸ್ಪಷ್ಟಪಡಿಸಿದರು.
ಕುಣಿಕೇರಿ ಗ್ರಾಮದ ಶಂಕರ ನಾಯಕ್ ಶಿವಪ್ಪ ಮುಂಗಲಿ ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರ,  ಕೊಪ್ಪಳದ ಸಣ್ಣ ಮೌಲಾಸಾಬ್ ಇಸ್ಮಾಯಿಲ್‌ಸಾಬ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ, ಗಂಗಾವತಿಯ ಚಕ್ರವರ್ತಿ ನಾಯಕ್ ಎಂಬುವವರು ರಾಷ್ಟ್ರೀಯ ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಒಂದು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದ್ದಾರೆ .
 
ಈ ಪೈಕಿ ಕುಣಿಕೇರಿ ತಾಂಡಾದ ಶಂಕರನಾಯಕ ಮುಂಗಲಿ ಗವಿಮಠದಿಂದ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತಹಶೀಲ್ದಾರ ಕಚೇರಿಗೆ ಆಗಮಿಸುವ ಮೂಲಕ ಗಮನ ಸೆಳೆದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್     ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.