ಬೆಂಗಳೂರು (ಪಿಟಿಐ): ~ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇವರೊಂದಿಗೆ ಬಿಜೆಪಿ ಸರ್ಕಾರದ ಹಲವು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ಮುಂದುವರೆಯಲು ಯಾವುದೇ ನೈತಿಕ ಹಕ್ಕು ಇಲ್ಲ~ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಭಾನುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತು.
~ವಿಧಾನಸಭೆಯನ್ನು ವಿಸರ್ಜಿಸಿ, ಹೊಸದಾಗಿ ಚುನಾವಣೆಯನ್ನು ನಡೆಸುವುದು ಉತ್ತಮ~ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಭವನದ ಹೊರಗೆ ನೆರೆದಿದ್ದ ಮಾಧ್ಯಮದವರಿಗೆ ತಿಳಿಸಿದರು.
ಸೋಮಣ್ಣ, ಯೋಗೇಶ್ವರ, ಮುರುಗೇಶ ನಿರಾಣಿ ಮತ್ತು ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ಸರ್ಕಾರದ ಹಲವು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇವರ ನಾಯಕ ಈಗಾಗಲೇ ಜೈಲಿಗೆ ಸೇರಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸಲು ನೈತಿಕ ಹಕ್ಕು ಕಳೆದುಕೊಂಡಿದೆ~ ಎಂದು ಅವರು ಆರೋಪಿಸಿದರು.
ಈ ಬಗ್ಗೆ ರಾಜ್ಯಪಾಲ ಎಚ್. ಆರ್. ಭಾರದ್ವಾಜ ಅವರ ಬಳಿ ಚರ್ಚಿಸಲಾಗಿದೆಯೇ ಎಂದು ಕೇಳಿದಾಗ ~ಇಲ್ಲ. ಖಂಡಿತ ಇಲ್ಲ. ಇದೊಂದು ಸೌಜನ್ಯದ ಭೇಟೆ~ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.