ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು 9 ಮತ್ತು 10ನೇ ತರಗತಿಯ ಮಕ್ಕಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರವೇ ರಾಜ್ಯಗಳಿಗೆ ಧನಸಹಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಪಾದಿಸಿದರು.
12ನೇ ಪಂಚವಾರ್ಷಿಕ ಯೋಜನೆ ಕುರಿತು ಕೇಂದ್ರ ಯೋಜನಾ ಆಯೋಗ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಸ್ಥರೊಂದಿಗೆ ಬೆಂಗಳೂರಿನಲ್ಲಿ ಶುಕ್ರವಾರ ನಡೆಸಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, `ಮಾಧ್ಯಮಿಕ ಶಿಕ್ಷಣವನ್ನು ಸಾರ್ವತ್ರಿಕಗೊಳಿಸಬೇಕು~ ಎಂದೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. 9 ಮತ್ತು 10ನೇ ತರಗತಿ ಮಕ್ಕಳಿಗೆ ಬಿಸಿಯೂಟ ಯೋಜನೆ ರಾಜ್ಯದಲ್ಲಿ ಈಗಾಗಲೇ ಅನುಷ್ಠಾನದಲ್ಲಿದ್ದು ಅದರ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ.
ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 65:35ರ ಅನುಪಾತದಲ್ಲಿ ವೆಚ್ಚವನ್ನು ಭರಿಸಬೇಕು. ಇದರ ಪ್ರಮಾಣವನ್ನು 75:25ಕ್ಕೆ ಬದಲಾಯಿಸಬೇಕು. ಪ್ರಸ್ತುತ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆ ದೇಶದ ಜಿಡಿಪಿಯ ಶೇಕಡ 1 ಮಾತ್ರ. ಇದನ್ನು 12ನೇ ಪಂಚವಾರ್ಷಿಕ ಯೋಜನೆಯಲ್ಲಿ ಕನಿಷ್ಠ ಶೇಕಡ 2ಕ್ಕೆ ಹೆಚ್ಚಿಸಬೇಕು. ಗ್ರಾಮೀಣ ಪ್ರದೇಶಗಳ ಆರೋಗ್ಯ ಸೇವೆಯ ಉಸ್ತುವಾರಿಯನ್ನು ಪಂಚಾಯತ್ ರಾಜ್ ಸಂಸ್ಥೆಗಳಿಗೆ ವಹಿಸಬೇಕು ಎಂದು ಸಲಹೆ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.