ADVERTISEMENT

ಬ್ಯಾಂಕ್ ದರೋಡೆಗೆ ಯತ್ನಿಸಿದ ಟೆಕ್ಕಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2012, 19:30 IST
Last Updated 19 ಅಕ್ಟೋಬರ್ 2012, 19:30 IST

ಬೆಂಗಳೂರು: ಖಾತೆ ತೆರೆಯುವ ಸೋಗಿನಲ್ಲಿ ಇಂದಿರಾನಗರದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಶಾಖೆ ಪ್ರವೇಶಿಸಿದ ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಬ್ಯಾಗ್‌ನಲ್ಲಿ ಬಾಂಬ್ ಇರುವುದಾಗಿ ಸಿಬ್ಬಂದಿಯನ್ನು ಬೆದರಿಸಿ ದರೋಡೆ ಮಾಡಲೆತ್ನಿಸಿದ ಘಟನೆ ಶುಕ್ರವಾರ ನಡೆದಿದೆ. ಬ್ಯಾಂಕ್‌ನ ಭದ್ರತಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಪ್ರಂಜಾಲ್ ಭಟ್ಟಚಾರ್ಜಿ (34) ಬಂಧಿತ ಆರೋಪಿ. ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬ್ಯಾಂಕ್ ಪ್ರವೇಶಿಸಿದ ಪ್ರಂಜಾಲ್, ನಂತರ ಬಟ್ಟೆಯಲ್ಲಿ ಸುತ್ತಿದ್ದ ವಸ್ತುವೊಂದನ್ನು ಬ್ಯಾಗ್‌ನಿಂದ ತೆಗೆದು ಬಾಂಬ್ ಎಂದು ಸಿಬ್ಬಂದಿಯನ್ನು ಬೆದರಿಸಿದ. ಯಾರಾದರೂ ಮಿಸುಕಾಡಿದರೆ ಬಾಂಬ್ ಸ್ಫೋಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ.

ಇದರಿಂದ ಆತಂಕಗೊಂಡ ಸಿಬ್ಬಂದಿ ಸ್ತಬ್ಧರಾಗಿ ನಿಂತರು. ಬಳಿಕ ನಗದು ಕೌಂಟರ್ ಬಳಿ ತೆರಳಿದ ಆರೋಪಿ, ಸುಮಾರು ಹದಿಮೂರು ಲಕ್ಷ ರೂಪಾಯಿ ಹಣವನ್ನು ಬ್ಯಾಗ್‌ಗೆ ತುಂಬಿಕೊಂಡು ಹೊರ ನಡೆಯಲು ಯತ್ನಿಸಿದ. ಈ ವೇಳೆ ಬ್ಯಾಂಕ್‌ನ ಭದ್ರತಾ ಸಿಬ್ಬಂದಿ ಬಾಗಿಲು ಮುಚ್ಚಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.