ಬೆಂಗಳೂರು: ರಾಜ್ಯ ಸರ್ಕಾರ ಒಟ್ಟು 170 ಮಠಗಳು ಮತ್ತು ಜಾತಿ ಜನಾಂಗಗಳ ಸಂಘ ಸಂಸ್ಥೆಗಳಿಗೆ ₨ 66 ಕೋಟಿ ಬಿಡುಗಡೆ ಮಾಡಿದೆ.
ಮಠಗಳಿಗೆ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2013–14ನೇ ಸಾಲಿನ ಬಜೆಟ್ನಲ್ಲಿ ಪ್ರಕಟಿಸಿದ್ದರು. ಈಗ ಅವುಗಳ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಆಯಾ ಮಠಗಳು ಹಾಗೂ ಜನಾಂಗಗಳ ಸಂಘಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳಿಗಾಗಿ ಈ ಹಣ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಇಬ್ರಾಹಿಂ?: ಸಿದ್ದರಾಮಯ್ಯ ಅವರ ಆಪ್ತರಾದ ಸಿ.ಎಂ.ಇಬ್ರಾಹಿಂ ಅವರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆ ಇದೆ.ಈ ಸಂಬಂಧ ಅವರು ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯ್ಸಿಂಗ್ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದು, ವರಿಷ್ಠರ ಒಪ್ಪಿಗೆ ಸಿಕ್ಕ ನಂತರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಗೊತ್ತಾಗಿದೆ.
ನೇಮಕ: ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರನ್ನು ದೆಹಲಿಯ ವಿಶೇಷ ಪ್ರತಿನಿಧಿ ಸ್ಥಾನಕ್ಕೆ ನೇಮಿಸಲು ತೀರ್ಮಾನಿಸಲಾಗಿದೆ. ಇಬ್ಬಾಹಿಂ ಮತ್ತು ಅಪ್ಪಾಜಿಗೌಡರ ನೇಮಕಕ್ಕೆ ಹೈಕಮಾಂಡ್ ಒಪ್ಪಿಗೆ ಸಿಕ್ಕ ನಂತರ ಚುನಾವಣಾ ಆಯೋಗದ ಒಪ್ಪಿಗೆ ಪಡೆದು ಸರ್ಕಾರಿ ಆದೇಶ ಹೊರಡಿಸುವ ಸಾಧ್ಯತೆ ಇದೆ.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅವರ ಹಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದು, ಆಯೋಗದ ಅನುಮತಿ ಸಿಕ್ಕ ನಂತರವೇ ಈ ಸಂಬಂಧದ ಆದೇಶ ಕೂಡ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.