ಉಡುಪಿ: ಅನಿವಾಸಿ ಭಾರತೀಯ ಉದ್ಯಮಿ ಬಿ.ಆರ್. ಶೆಟ್ಟಿ ಅವರ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿರುವ ‘ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ’ ಉದ್ಘಾಟನೆಗೆ ಇಂದು ಮುಖ್ಯಮಂತ್ರಿ ಆಗಮಿಸುತ್ತಿರುವಂತೆಯೇ, ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ ನಿರ್ಧರಿಸಿದೆ. ಅಜ್ಜರಕಾಡಿನ ಗಾಂಧಿ ಪ್ರತಿಮೆ ಬಳಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ತಿಳಿಸಿದೆ.
ಸಮಿತಿಯ ಮುಖ್ಯಸ್ಥ ಡಾ. ಪಿ.ವಿ. ಭಂಡಾರಿ ಅವರು ಮಾತನಾಡಿ, ‘ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆ ಅಭಿವೃದ್ಧಿಪಡಿಸುವುದನ್ನು ಪ್ರಶ್ನಿಸಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಪ್ರಕರಣ ಇನ್ನೂ ಇತ್ಯರ್ಥ ಆಗದಿರುವಾಗ ಆಸ್ಪತ್ರೆಯನ್ನು ಉದ್ಘಾಟನೆ ಮಾಡುವುದು ಸರಿಯಲ್ಲ. ಅಷ್ಟಕ್ಕೂ ಆಸ್ಪತ್ರೆ ಕಾಮಗಾರಿಯೂ ಇನ್ನೂ ಪೂರ್ಣಗೊಂಡಿಲ್ಲ’ ಎಂದರು.
ಉದ್ಯಮಿ ಜಿ. ಶಂಕರ್ ಅವರು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ 100 ಹಾಸಿಗೆ ಸೌಲಭ್ಯ ನೀಡುತ್ತಿದ್ದಾರೆ. ಬಿ.ಆರ್. ಶೆಟ್ಟಿ ಅವರು ಸಹ ಅದೇ ರೀತಿ ಇಲ್ಲಿ ಮಾಡಬೇಕು ಎಂದು ಅವರು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.