ಕಡೂರು: ಮಾಜಿ ಶಾಸಕ ಡಾ.ವೈ.ಸಿ.ವಿಶ್ವನಾಥ್ (68) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಅವರ ಪತ್ನಿ ಸುವರ್ಣಮ್ಮ 6 ತಿಂಗಳ ಹಿಂದೆ ನಿಧನರಾಗಿದ್ದರು.
ತಾಲ್ಲೂಕಿನ ಯಳ್ಳಬಳಸೆಯ ವೈ.ಎನ್.ಚಂದ್ರಶೇಖರಯ್ಯ ಅವರ ಪುತ್ರ ವಿಶ್ವನಾಥ್ ಅವರು ವೈದ್ಯಕೀಯ ಪದವಿ ನಂತರ ಸರ್ಕಾರಿ ವೈದ್ಯರಾಗಿ ವೃತ್ತಿ ಜೀವನ ಆರಂಭಿಸಿದರು. ಕಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಙರಾಗಿ ಖ್ಯಾತಿ ಪಡೆದಿದ್ದರು.
1999 ರಲ್ಲಿ ಸ್ವಯಂ ನಿವೃತ್ತಿ ಪಡೆದು ಪ್ರಥಮ ಭಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಪರಾಭವಗೊಂಡರು. ನಂತರ 2008 ರಲ್ಲಿ ಮತ್ತೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧೆ ಮಾಡಿ ಪರಾಜಿತ
ರಾದರು. 2010ರಲ್ಲಿ ಕಡೂರು ಶಾಸಕರಾಗಿದ್ದ ಕೆ.ಎಂ.ಕೃಷ್ಣಮೂರ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಾಗ ವಿಶ್ವನಾಥ್ ಸ್ಪರ್ಧಿಸಿ ಗೆಲುವು ಸಾಧಿಸಿದರು.
ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಳ್ಳಿಪ್ರಕಾಶ್ ಅವರ ಪರ ಪ್ರಚಾರ ನಡೆಸಿದ್ದರು. ಚುನಾವಣಾ ಫಲಿತಾಂಶದ ಮಾರನೇ ದಿನವೇ ವಿಶ್ವನಾಥ್ ಅಸ್ವಸ್ಥರಾಗಿದ್ದರು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.