ADVERTISEMENT

‘ಮಾನ್ಯತೆ ನೀಡದಿದ್ದರೆ, ಅಧಿಕಾರಕ್ಕೆ ಬರಲ್ಲ’

ಅಮಿತ್ ಶಾ ಹೇಳಿಕೆಗೆ ತೋಂಟದ ಶ್ರೀ ಖಂಡನೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 19:30 IST
Last Updated 5 ಏಪ್ರಿಲ್ 2018, 19:30 IST
‘ಮಾನ್ಯತೆ ನೀಡದಿದ್ದರೆ, ಅಧಿಕಾರಕ್ಕೆ ಬರಲ್ಲ’
‘ಮಾನ್ಯತೆ ನೀಡದಿದ್ದರೆ, ಅಧಿಕಾರಕ್ಕೆ ಬರಲ್ಲ’   

ಗದಗ: ‘ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಕೊಡದಿದ್ದರೆ, ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಬುಧವಾರ ರಾತ್ರಿ ಮಠದಲ್ಲಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಬಿಜೆಪಿ ಇರುವವರೆಗೆ ಲಿಂಗಾಯತ ಪ್ರತ್ಯೇಕ ಧರ್ಮ ಆಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಶಾ ಹೇಳಿಕೆಯಿಂದ ಕೇಂದ್ರ ಸರ್ಕಾರದ ಧೋರಣೆ ಏನು ಎಂಬುದು ಗೊತ್ತಾಗಿದೆ. ಕೊಡದಿದ್ದರೆ ಅವರು ಅಧಿಕಾರಕ್ಕೆ ಬರುವುದಿಲ್ಲ’ ಎಂದು ಹೇಳಿದರು.

ADVERTISEMENT

‘ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕೆಲ ಸ್ವಾಮೀಜಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ, ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುತ್ತೇವೆ, ಪ್ರಚಾರ ಮಾಡುತ್ತೇವೆ ಎಂದು ಹೇಳಿದ್ದರು. ಈಗ ಮತ್ತೆ ಉಲ್ಟಾ ಹೊಡೆದಿದ್ದಾರೆ. ಇವರಿಗೆಲ್ಲಾ ಸರಿಯಾದ ಅಡಿಪಾಯ ಇಲ್ಲ. ಇವರೆಲ್ಲ ಸವದತ್ತಿ ಯಲ್ಲಮ್ಮನ ದೇವಸ್ಥಾನದಲ್ಲಿ ಜೋಗಪ್ಪಗಳು ಔಟ್ ಆದಂತೆ ಸಮಾಜದ ಎದುರು ಔಟ್ ಆಗಿದ್ದಾರೆ’ ಎಂದು ಕುಟುಕಿದರು.

ಭಕ್ತರ ಸ್ಪಷ್ಟನೆ: ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಅವರು ಬುಧವಾರ ರಾತ್ರಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ ಸಭೆಯಲ್ಲಿ ಮಾತನಾಡಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದು ಮಠದ ಭಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ತೋಂಟದಾರ್ಯ ಮಠವು ಯಾವುದೇ ಪಕ್ಷದ ಪರ ಅಥವಾ ವಿರುದ್ಧ ಇಲ್ಲ ಎಂದೂ ಶ್ರೀಗಳು ಸ್ಪಷ್ಟಪಡಿಸಿದ್ದಾರೆ’ ಎಂದು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕವಳಿಕಾಯಿ, ಬಸವಕೇಂದ್ರದ ಅಧ್ಯಕ್ಷ ಕೆ.ಎಸ್. ಚೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.7ಕ್ಕೆ ಬೆಂಗಳೂರಿನಲ್ಲಿ ಸಭೆ
‘ಅಮಿತ್‌ ಶಾ ಹೇಳಿಕೆ ಹಿನ್ನೆಲೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂದಿನ ರೂಪುರೇಷೆ ಕುರಿತು ಚರ್ಚಿಸಲು ಇದೇ 7ರಂದು ಬೆಂಗಳೂರಿನ ಜ್ಞಾನ ಗಂಗೋತ್ರಿಯಲ್ಲಿ ಸಭೆ ಕರೆಯಲಾಗಿದೆ’ ಎಂದು ಸಿದ್ಧಲಿಂಗ ಸ್ವಾಮೀಜಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.