ADVERTISEMENT

ಮಾರ್ಚ್ 23: ಧಾರವಾಡದಲ್ಲಿ ಹಾವನೂರ್‌ದತ್ತಿ ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2011, 19:30 IST
Last Updated 27 ಫೆಬ್ರುವರಿ 2011, 19:30 IST

ಬೆಂಗಳೂರು: ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ವಕೀಲರ ವೇದಿಕೆ ಜಂಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದ ದಿವಂಗತ ಎಲ್.ಜಿ. ಹಾವನೂರ ಅವರ ಸ್ಮರಾಣಾರ್ಥವಾಗಿ ಮಾರ್ಚ್ 23 ರಂದು ಧಾರವಾಡದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜೆ.ಎಸ್. ಪಾಟೀಲ್ ಇಲ್ಲಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವನೂರ ಅವರು ಡಿ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ  ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು.ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅವರು ಸಲ್ಲಿಸಿದ ವರದಿ ಇಂದಿಗೂ ‘ಹಿಂದುಳಿದ ವರ್ಗಗಳ ಬೈಬಲ್’ ಎಂದೇ ಪ್ರಖ್ಯಾತಿ ಹೊಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕ್ರಾಂತಿಯನ್ನೇ ಮಾಡಿದ್ದು ಇವರ ಸ್ಮರಾಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕೇಂದ್ರ ಕಾನೂನು ಸಚಿವ ಎಂ. ವೀರಪ್ಪ ಮೊಯಿಲಿ, ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಂ.ಎನ್. ರಾವ್, ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್, ಸಾಹಿತಿ ಪಾಟೀಲ ಪುಟ್ಟಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ವಕೀಲರ ವೇದಿಕೆ ಸಂಸ್ಥಾಪಕ ರವಿವರ್ಮ ಕುಮಾರ್, ಪ್ರೊ. ಎನ್.ವಿ ನರಸಿಂಹಯ್ಯ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.