ಬೆಂಗಳೂರು: ಕಾವೇರಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ಸಲ್ಲಿಸಿರುವ ವಿಶೇಷ ಅರ್ಜಿ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆದಿದೆ.
ನ್ಯಾ.ದೀಪಕ್ ಮಿಶ್ರ ನೇತೃತ್ವದ ನ್ಯಾ.ಅಮಿತವ್ ರಾಯ್, ನ್ಯಾ.ಎ.ಎಂ. ಖಾನ್ವಿಲ್ಕರ್ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದಾರೆ. ಕರ್ನಾಟಕದ ಪರ ಫಾಲಿ ನಾರಿಮನ್ ವಾದ ಮಂಡಿಸಿದ್ದು, ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಅದೇ ವೇಳೆ ಮುಂದಿನ ಆದೇಶದವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕೋರ್ಟ್ ಆದೇಶಿಸಿದೆ. ಅ. 7 ರಿಂದ ಅ. 18ರ ವರೆಗೆ ನೀರು ಬಿಡುವ ಆದೇಶವನ್ನು ಕರ್ನಾಟಕ ಪಾಲಿಸಬೇಕು ಎಂದು ಹೇಳಿದ ಕೋರ್ಟ್ ಎರಡೂ ರಾಜ್ಯಗಳು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಹೇಳಿದೆ.
ಸೆ. 12, ಸೆ. 20, ಸೆ. 27 ಮತ್ತು ಸೆ. 30ರಂದು ವಿಚಾರಣೆ ನಡೆಸಿ ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದ್ದ ಕೋರ್ಟ್, ಕರ್ನಾಟಕವು ಆದೇಶ ಪಾಲನೆ ಮಾಡದ್ದರಿಂದ ವಸ್ತುಸ್ಥಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಉನ್ನತ ಮಟ್ಟದ ತಜ್ಞರ ತಂಡಕ್ಕೆ ಅಕ್ಟೋಬರ್ 4ರಂದು ಸೂಚಿಸಿತ್ತಲ್ಲದೆ, 10 ದಿನಗಳ ಕಾಲ ನಿತ್ಯ 2,000 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.