ADVERTISEMENT

ಮುಂದಿನ ವಾರ ಜೈರಾಜ್ ಸಮಿತಿ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2011, 19:30 IST
Last Updated 13 ಅಕ್ಟೋಬರ್ 2011, 19:30 IST

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ಸಲ್ಲಿಸಿರುವ ತನಿಖಾ ವರದಿ ಕುರಿತು ಪರಿಶೀಲನೆ ನಡೆಸುತ್ತಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ನೇತೃತ್ವದ ಸಮಿತಿ ಮುಂದಿನ ವಾರ ಸರ್ಕಾರಕ್ಕೆ ಪರಿಶೀಲನಾ ವರದಿ ಸಲ್ಲಿಸಲಿದೆ.

ಲೋಕಾಯುಕ್ತ ವರದಿಯಲ್ಲಿ ಹೆಸರಿಸಲಾಗಿರುವ ಅಧಿಕಾರಿಗಳು ಮತ್ತು ಅವರ ವಿರುದ್ಧದ ಆರೋಪಗಳ ಬಗ್ಗೆ ಪ್ರಮುಖವಾಗಿ ಈ ಸಮಿತಿ ಪರಿಶೀಲನೆ ನಡೆಸುತ್ತಿದೆ. ದೊಡ್ಡ ಪ್ರಮಾಣದ ಅಕ್ರಮ ಗಣಿಗಾರಿಕೆ ನಡೆಸಿರುವ ಬಳ್ಳಾರಿಯ ಖಾರದಪುಡಿ ಮಹೇಶ್, ಸ್ವಸ್ತಿಕ್ ನಾಗರಾಜ್ ಮತ್ತು ಮಧುಕುಮಾರ್ ವರ್ಮಾ ಅವರಿಂದ ಹಣ ಪಡೆದಿರುವ ಆರೋಪಕ್ಕೆ ಗುರಿಯಾಗಿರುವ 700ಕ್ಕೂ ಹೆಚ್ಚು ಅಧಿಕಾರಿಗಳ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸುತ್ತಿದೆ.

ಆರು ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ  ವರದಿಯಲ್ಲಿ ಉಲ್ಲೇಖವಿದೆ. ಆಯಾ ಇಲಾಖೆಗಳ ಮೂಲಕವೇ ಆರೋಪಿಗಳಿಗೆ ನೋಟಿಸ್ ನೀಡಲಾಗಿತ್ತು. ಬಳಿಕ ಅವರು ಸಲ್ಲಿಸಿರುವ ಉತ್ತರಗಳನ್ನೂ ಪರಿಶೀಲನೆ ನಡೆಸಿರುವ ಸಮಿತಿ, ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಲಿದೆ.

ಈವರೆಗೂ ಹಲವು ಸಭೆಗಳನ್ನು ನಡೆಸಿರುವ ಸಮಿತಿ, ಸೋಮವಾರದ ಬಳಿಕ ಮತ್ತೊಂದು ಸಭೆ ನಡೆಸಿ ವರದಿಯನ್ನು ಅಂತಿಮಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.