ADVERTISEMENT

ಮುಖ್ಯಮಂತ್ರಿ ಕಚೇರಿ ಸಿಬ್ಬಂದಿ ಕಡಿತ?

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2011, 19:30 IST
Last Updated 18 ಅಕ್ಟೋಬರ್ 2011, 19:30 IST

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಮ್ಮ ಕಚೇರಿ ಸಿಬ್ಬಂದಿ ಸಂಖ್ಯೆಯನ್ನು ಕಡಿತ ಮಾಡಲು ಮುಂದಾಗಿದ್ದಾರೆ.ಮೂಲಗಳ ಪ್ರಕಾರ ಮುಖ್ಯಮಂತ್ರಿ ಕಚೇರಿಯಲ್ಲಿ ಪ್ರಸ್ತುತ 305 ಮಂದಿ ಕೆಲಸ ಮಾಡುತ್ತಿದ್ದು, ಅವರಲ್ಲಿ 100ರಿಂದ 120 ಮಂದಿಯನ್ನು ಮಾತೃ ಇಲಾಖೆಗಳಿಗೆ ಕಳುಹಿಸಲು ನಿರ್ಧರಿಸಲಾಗಿದೆ.

ಅನಗತ್ಯ ಸಿಬ್ಬಂದಿ ಯಾವ ವಿಭಾಗಗಳಲ್ಲಿ ಇದ್ದಾರೆ ಎಂಬುದನ್ನು ಪತ್ತೆಹಚ್ಚಲು ತಮ್ಮ ಆಪ್ತ ಸಿಬ್ಬಂದಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಸದ್ಯದಲ್ಲೇ ಇದು ಜಾರಿಗೆ ಬರಲಿದೆ ಎನ್ನಲಾಗಿದೆ.

ಈ ಸಿಬ್ಬಂದಿ ಮುಖ್ಯಮಂತ್ರಿ ಕಚೇರಿಯಿಂದ ವೇತನ ಪಡೆಯುತ್ತಿದ್ದರೂ ಕೆಲಸ ಮಾತ್ರ ಬೇರೆ ಬೇರೆ ಕಡೆ (ಶಾಸಕರು, ಮಾಜಿ ಸಚಿವರು ಸೇರಿದಂತೆ ಇತರರ ಕಡೆ ಇದ್ದಾರೆ) ಮಾಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಂತಹ ಸಿಬ್ಬಂದಿಯನ್ನು ಹಿಂದಕ್ಕೆ ಪಡೆದು ಬಿಡುಗಡೆ ಮಾಡಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿದ್ದರು. ನಂತರ ಅವರನ್ನು ತಮಗೆ ಬೇಕಾದ ಶಾಸಕರು ಸೇರಿದಂತೆ ಆಪ್ತರ ಆಪ್ತ ಶಾಖೆಗಳಿಗೆ ನಿಯೋಜನೆ ಮಾಡಿದ್ದರು.
ಈ ವಿಷಯ ಗಮನಕ್ಕೆ ಬಂದ ತಕ್ಷಣ ಮುಖ್ಯಮಂತ್ರಿ ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸಲು ತೀರ್ಮಾನಿಸಿದರು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.