ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಆಯ್ಕೆಗೊಂಡಿರುವ 629 ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಕೂಡಲೇ ನೇಮಕಾತಿ ಆದೇಶ ನೀಡಬೇಕು ಎಂದು ಭಾರತ್ ವಿದ್ಯಾರ್ಥಿ ಕ್ರಿಯಾ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.
ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಸ್ಪಂದಿಸದಿರುವುದು ಸರಿಯಲ್ಲ ಎಂದು ಸಮಿತಿಯ ರಾಜ್ಯಸಂಚಾಲಕ ಸೂರ್ಯ ಮುಕುಂದರಾಜ್, ನಗರ ಸಂಚಾಲಕ ಭರತ್ ಭೂಷಣ್, ಸಹ ಸಂಚಾಲಕ ಸುನಿಲ್ ಕುಮಾರ್ ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ನೇರ ನೇಮಕಾತಿ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ. ಆದರೆ ಇದುವರೆಗೆ ನೇಮಕಾತಿ ಆದೇಶ ನೀಡದೆ ಇರುವುದರಿಂದ ಅಭ್ಯರ್ಥಿಗಳು ಕಂಗಾಲಾಗಿದ್ದಾರೆ. ಸರ್ಕಾರ ಅಭ್ಯರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ. ಕಾನೂನು ತೊಡಕುಗಳನ್ನು ನಿವಾರಿಸಿ ಕೂಡಲೇ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.