ADVERTISEMENT

ಮೇಲುಸೇತುವೆ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2011, 19:55 IST
Last Updated 2 ಮಾರ್ಚ್ 2011, 19:55 IST

ಯಲಹಂಕ: ಹೆಣ್ಣೂರು ವರ್ತುಲ ರಸ್ತೆಯ ಸಿಗ್ನಲ್ ಬಳಿ ಮೇಲುಸೇತುವೆ ಮತ್ತು ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬಿಡಿಎ ಆಯುಕ್ತ ಭರತ್‌ಲಾಲ್ ಮೀನಾ ಅವರು ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸ್ಥಳೀಯ ಶಾಸಕ ಕೆ.ಜೆ.ಜಾರ್ಜ್ ಅವರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು.

ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿ ವೇಳೆ ಸಾರ್ವಜನಿಕರು ಮತ್ತು ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ‘ಹೆಣ್ಣೂರು ಸಿಗ್ನಲ್ ಬಳಿಯೇ ಬಸ್ ಡಿಪೋ ಇದ್ದು, ವಾಹನ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯರು ತೊಂದರೆ ಅನುಭವಿಸುವಂತಾಗಿದೆ. ಮೇಲುಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ಹೋಗಲು ಅನುಕೂಲವಾಗಬಹುದು.

ಆದರೆ ಕೆಳಭಾಗದಲ್ಲಿ ನೆಲೆಸಿರುವ ಜನರಿಗೆ ತೊಂದರೆಯಾಗಲಿದೆ’ ಎಂದು ಶಾಸಕ ಕೆ.ಜೆ.ಜಾರ್ಜ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿದ ನಂತರ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ‘ಎಚ್‌ಬಿಆರ್ ಬಡಾವಣೆಯ 5ನೇ ಬ್ಲಾಕ್‌ನಲ್ಲಿ ಅರಣ್ಯ ಇಲಾಖೆಯ ವಶದಲ್ಲಿರುವ 43 ಎಕರೆ ಭೂಮಿಯನ್ನು ಬಿಡಿಎಗೆ ಹಸ್ತಾಂತರಿಸಿದರೆ ಆ ಜಾಗವನ್ನು ಅಭಿವೃದ್ಧಿಪಡಿಸಿ, ಸಾರ್ವಜನಿಕರ ಅನುಕೂಲಕ್ಕೆ ಬಳಸಬಹುದು. ಈ ಸಂಬಂಧ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ. ಹಾಗೆಯೇ ನಾಗವಾರದ ಅಂಬೇಡ್ಕರ್ ಆಟದ ಮೈದಾನದಲ್ಲಿ ಕಿರು ಕ್ರೀಡಾಂಗಣ ನಿರ್ಮಿಸಲು ಬಿಡಿಎಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಜಾರ್ಜ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.