ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ಹೊರಡಿಸಲಾದ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯರ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ಮನವಿ ಸಲ್ಲಿಸಿದೆ.
‘ಶಿಕ್ಷಣ ತಜ್ಞರು, ಉಪನ್ಯಾಸಕರ ಸಂಘಟನೆಗಳು ಹಾಗೂ ವಿಧಾನ ಪರಿಷತ್ ಸದಸ್ಯರ ಅಭಿಪ್ರಾಯ ಪಡೆಯದೆ ಮೇ 2ರಿಂದಲೇ ಕಾಲೇಜು ಆರಂಭಿಸುವಂತೆ ಏಕಪಕ್ಷೀಯವಾಗಿ ಸುತ್ತೋಲೆ ಹೊರಡಿಸಲಾಗಿದೆ’ ಎಂದು ನಿಯೋಗ ದೂರಿದೆ.
‘ಅಕ್ಟೋಬರ್ ತಿಂಗಳಿನಲ್ಲಿ ಕೂಡ 15 ದಿನಕ್ಕೆ ರಜೆಯನ್ನು ಕಡಿತಗೊಳಿಸಲಾಗಿತ್ತು. ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆ ವಿಷಯದಲ್ಲಿ ವ್ಯಾಕರಣ ಮತ್ತು ಮಾತನಾಡುವ ಕೌಶಲ ವೃದ್ಧಿಸುವ ಸಲುವಾಗಿ 27 ಭಾನುವಾರಗಳಂದು ಉಪನ್ಯಾಸಕರು ತರಗತಿಗಳನ್ನು ತೆಗೆದುಕೊಂಡಿದ್ದಾರೆ.
ಈಗ ಹೆಚ್ಚಿನ ಉಪನ್ಯಾಸಕರು/ಪ್ರಾಂಶುಪಾಲರನ್ನು ಮೇ 15ರವರೆಗೆ ಚುನಾವಣಾ ಕಾರ್ಯದಲ್ಲಿ ನಿಯೋಜಿಸಲಾಗಿದೆ. ಮೇ 2ರವರೆಗೆ ಮೌಲ್ಯಮಾಪನ ಕಾರ್ಯವಿತ್ತು. ಇಲಾಖೆಯ ಆದೇಶದ ಮೇಲೆ ಉಪನ್ಯಾಸಕರು ನಿರಂತರವಾಗಿ ಒಂದಿಲ್ಲೊಂದು ಹೆಚ್ಚುವರಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೂ ರಜೆಯನ್ನು ಕಡಿತಗೊಳಿಸಿ ಆದೇಶ ಹೊರಡಿಸಿರುವುದು ಕಾನೂನುಬಾಹಿರ’ ಎಂದಿದೆ.
‘ಮೇ ತಿಂಗಳಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 45 ಡಿಗ್ರಿ ಸೆಲ್ಸಿಯಸ್ಗೂ ಹೆಚ್ಚು ತಾಪಮಾನವಿರುತ್ತದೆ. ಮೇ ತಿಂಗಳಲ್ಲಿ ಉಚಿತ ಬಸ್ ಪಾಸ್ ವಿತರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವೂ ತಿಳಿಸಿದೆ. ಇದರಿಂದ ವಿದ್ಯಾರ್ಥಿಗಳಿಗೂ ಸಮಸ್ಯೆ ಆಗುತ್ತದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಮೇ 28ರಂದು ಕಾಲೇಜುಗಳನ್ನು ಪ್ರಾರಂಭಿಸಬೇಕು’ ಎಂದು ನಿಯೋಗ ಒತ್ತಾಯಿಸಿದೆ.
‘ಉಪನ್ಯಾಸಕರ ಈ ಎಲ್ಲಾ ಬೇಡಿಕೆಗಳ ಬಗ್ಗೆ ತಿಳಿದಿದ್ದು, ಮುಖ್ಯಮಂತ್ರಿ ಜೊತೆ ಮಾತನಾಡಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುತ್ತೇವೆ ಎಂದು ರತ್ನಪ್ರಭಾ ಪ್ರತಿಕ್ರಿಯಿಸಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.