ಮೈಸೂರು: ಲೋಕಪಾಲ ನೇಮಕ ಮತ್ತು ರೈತರ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ದೆಹಲಿಯಲ್ಲಿ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಜಾ ಪಕ್ಷದ ಕಾರ್ಯಕರ್ತರು ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಜಿಲ್ಲಾ ನ್ಯಾಯಾಲಯದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಶಿಫಾರಸು ಮಾಡಿದ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೆ ತರುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ದೇಶಕ್ಕೆ ಆಹಾರ ಪೂರೈಕೆ ಮಾಡುತ್ತಿರುವ ರೈತರು ನಿತ್ಯ ಚಳಿ, ಗಾಳಿ ಹಾಗೂ ಬಿಸಿಲನ್ನು ಲೆಕ್ಕಿಸದೆ ದುಡಿಮೆ ಮಾಡುತ್ತಿದ್ದಾರೆ. ರೈತರು ಸುರಿಸಿದ ಬೆವರಿಗೆ ತಕ್ಕ ಫಲ ಸಿಗುತ್ತಿಲ್ಲ. ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರುಪಾವತಿಸುವ ಶಕ್ತಿಯೂ ಇಲ್ಲವಾಗಿದೆ. ಇದರಿಂದ ರೈತರು ಆತ್ಮಹತ್ಯೆಯ ದಾರಿ ತುಳಿದಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.