ADVERTISEMENT

ಮ್ಯಾನ್‌ಹೋಲ್‌ ಪ್ರಕರಣ: ಪಿಡಿಓ, ಗ್ರಾ.ಪಂ ಅಧ್ಯಕ್ಷೆ ವಿರುದ್ಧ ಕ್ರಮ

​ಪ್ರಜಾವಾಣಿ ವಾರ್ತೆ
Published 8 ಜೂನ್ 2017, 19:30 IST
Last Updated 8 ಜೂನ್ 2017, 19:30 IST
ಗೀತಾ
ಗೀತಾ   

ಬೆಂಗಳೂರು: ಮೈಸೂರು ಜಿಲ್ಲೆ ಚಾಮುಂಡಿ ಬೆಟ್ಟದಲ್ಲಿ ಪೌರ ಕಾರ್ಮಿಕರನ್ನು ‘ಮ್ಯಾನ್‌ಹೋಲ್‌’ಗೆ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯಿತಿಯ ಪಿಡಿಓ ಆನಂದ್‌ ಅವರನ್ನು ಅಮಾನತುಗೊಳಿಸಲಾಗಿದೆ.

ಅಲ್ಲದೆ, ಗ್ರಾಮ ಪಂಚಾಯಿತಿ  ಅಧ್ಯಕ್ಷೆ ಗೀತಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಸದಸ್ಯತ್ವ ಅನರ್ಹಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್‌.ಕೆ.ಪಾಟೀಲ ವಿಧಾನಸಭೆಯಲ್ಲಿ ತಿಳಿಸಿದರು.

‘ಇದೊಂದು ದುರ್ದೈವದ  ಘಟನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದಲ್ಲಿ ಯಾವುದೇ ಗ್ರಾಮ ಪಂಚಾಯಿತಿಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ‘ಮೈಸೂರಿನಲ್ಲಿ ಮುಖ್ಯಮಂತ್ರಿ ವಿಧಾನಸಭಾ ಕ್ಷೇತ್ರದಲ್ಲೇ ನಡೆದ ಈ ಘಟನೆ ಅಮಾನವೀಯ ಮತ್ತು ಖಂಡನಾರ್ಹ.  ಆಧುನಿಕ ಯಂತ್ರಗಳು ಲಭ್ಯ ಇರುವಾಗ ಪೌರ ಕಾರ್ಮಿಕರು ಮತ್ತು ದಲಿತರನ್ನು ಈ ಕಾರ್ಯದಲ್ಲಿ ತೊಡಗಿಸಿದ್ದು ನಾಚಿಕೆಗೇಡಿನ ಸಂಗತಿ’ ಎಂದು ಕಿಡಿ ಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.