ADVERTISEMENT

ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯ ಕಟ್ಟಡ: ಯಥಾಸ್ಥಿತಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 19:30 IST
Last Updated 22 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ತುಮಕೂರಿನ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿನ ಐತಿಹಾಸಿಕ ಕಟ್ಟಡಗಳನ್ನು ಹಾಗೆಯೇ ಉಳಿಸಿಕೊಳ್ಳಲು ಹೈಕೋರ್ಟ್ ಸರ್ಕಾರಕ್ಕೆ ಗುರುವಾರ ಆದೇಶಿಸಿದೆ.

ದೇವಾಲಯದ ಕಟ್ಟಡ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಹಲವಾರು ಭಕ್ತರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಈ ಆದೇಶದ ಹಿನ್ನೆಲೆಯಲ್ಲಿ, 16 ಮತ್ತು 17ನೇ ಶತಮಾನದಷ್ಟು ಹಳೆಯದಾಗಿರುವ ಈ ಕಟ್ಟಡಗಳನ್ನು ಹಾಗೆಯೇ ಉಳಿಸಿಕೊಳ್ಳುವುದಾಗಿ ಕೋರ್ಟ್‌ನಲ್ಲಿ ಹಾಜರಿದ್ದ ಕೇಂದ್ರ ಸರ್ವೇಕ್ಷಣಾ ನಿರ್ದೇಶನಾಲಯದ ಅಧಿಕಾರಿ ಮಂಜುನಾಥ ಅವರು ಒಪ್ಪಿಕೊಂಡರು. 

ಕಟ್ಟಡ ನೆಲಸಮ ಕುರಿತಾಗಿ ಪರಿಶೀಲನೆ ನಡೆಸಲು ರಾಜ್ಯದ ಪುರಾತತ್ವ ಇಲಾಖೆಯ ಅಧಿಕಾರಿಯೊಬ್ಬರ ಸಹಕಾರ ಪಡೆದುಕೊಳ್ಳುವಂತೆ ಸರ್ಕಾರದ ಪರ ವಕೀಲರಿಗೆ ಪೀಠ ಸೂಚಿಸಿತು.

ದೇವಾಲಯದ ಮರು ನಿರ್ಮಾಣದ ಕುರಿತ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಲು ವಿಫಲವಾಗಿದ್ದ ನಿರ್ದೇಶನಾಲಯವನ್ನು ಕಳೆದ ಬಾರಿ ವಿಚಾರಣೆ ವೇಳೆ ಕೋರ್ಟ್ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿತ್ತು.
ಬಿಎಸ್‌ವೈ ಇನ್ನೊಂದು

ಅರ್ಜಿ: ನೋಟಿಸ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇನ್ನೊಂದು ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ 2 ಮತ್ತು 3ನೇ ಖಾಸಗಿ ದೂರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ವಿಚಾರಣೆಗೆ ಅಂಗೀಕರಿಸಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ರಾಜ್ಯಪಾಲರು ದೂರು ದಾಖಲು ಮಾಡಲು ಕೆಲವು ಪ್ರಕರಣಗಳಿಗೆ ಅನುಮತಿ ನೀಡದಿದ್ದರೂ ಅದನ್ನು ಕೋರ್ಟ್ ವಿಚಾರಣೆಗೆ ಅಂಗೀಕರಿಸಿರುವುದು ಸರಿಯಲ್ಲ ಎನ್ನುವುದು ಅವರ ವಾದ. ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿವಾದಿ ಬಾಷಾ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿಚಾರಣೆ ಮುಂದೂಡಿದರು.

ಪರೀಕ್ಷೆ ತಡೆಗೆ ನಕಾರ
 ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಸುಮಾರು 439 ಕಾಲೇಜುಗಳಲ್ಲಿ ಇದೇ 19ರಿಂದ ಆರಂಭಗೊಂಡ ಪ್ರಾಯೋಗಿಕ ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಪರೀಕ್ಷೆಯು ನಿಯಮಾನುಸಾರ ನಡೆಯುತ್ತಿಲ್ಲ ಎಂದು ದೂರಿ ಶ್ರೀಲಂಕಾ ಮೂಲದ ವಿದ್ಯಾರ್ಥಿನಿ ಎನ್. ರಂಡಿಕಾ ಹಾಗೂ ಇತರ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ವಜಾಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.