ADVERTISEMENT

ಯೋಜನೆ ಅನುಷ್ಠಾನದಲ್ಲಿ ನ್ಯೂನತೆ: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2011, 19:30 IST
Last Updated 14 ಅಕ್ಟೋಬರ್ 2011, 19:30 IST

ಬೆಂಗಳೂರು: `ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗೆ ಪ್ರಯತ್ನಗಳು ನಡೆಯುತ್ತಿದ್ದರೂ ಸರ್ಕಾರ ಬಯಸಿದ ರೀತಿಯಲ್ಲಿ ಯೋಜನೆಗಳು ಅನುಷ್ಠಾನವಾಗುತ್ತಿಲ್ಲ. ಹಲವು ರೀತಿಯ ನ್ಯೂನತೆಗಳು ಇನ್ನೂ ಎದ್ದು ಕಾಣುತ್ತಿವೆ~ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್ ಶುಕ್ರವಾರ ಇಲ್ಲಿ ಹೇಳಿದರು.

ವಿಕಾಸಸೌಧದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸದ್ಬಳಕೆ, ಬೀದಿ ದೀಪಗಳ ನಿರ್ವಹಣೆ, ರಸ್ತೆ ಹಾಗೂ ಚರಂಡಿ ನಿರ್ಮಾಣ, ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಅನೇಕ ಲೋಪಗಳು ಕಾಣುತ್ತಿವೆ ಎಂದು ಶೆಟ್ಟರ್ ಪಟ್ಟಿ ಮಾಡಿದರು.

ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯಕ್ಕೆ ಕಡೆಯ ಪ್ರಾಶಸ್ತ್ಯ ನೀಡಲಾಗುತ್ತಿದೆ. ಅನುದಾನವನ್ನೂ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಜನರ ಆಶೋತ್ತರಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂದು ಹೇಳಿದರು.

ಅಭಿವೃದ್ಧಿ ಯೋಜನೆಗಳು ವ್ಯಕ್ತಿ ನೆಲೆಯಲ್ಲಿ ಅನುಷ್ಠಾನಗೊಳ್ಳುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು. ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳಲ್ಲಿ ಯೋಜನೆಗಳ ಅನುಷ್ಠಾನ ವಿಷಯದಲ್ಲಿ ಸಮನ್ವಯ ಇರಬೇಕು ಎಂದೂ ಅವರು ಸಲಹೆ ನೀಡಿದರು.

ದೇಶದಲ್ಲೇ ವೊದಲ ಬಾರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ನೇಮಿಸಿದ್ದು, ಅವರು ಈ ವಿಷಯಗಳ ಕುರಿತು ಗಮನಹರಿಸಬೇಕು. ಗ್ರಾಮಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.

ಪಿಡಿಓಗಳ ನೇಮಕದ ನಂತರ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಕೆಲ ಸಮಸ್ಯೆಗಳು ಕಾಣಿಸುತ್ತಿವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಧ್ಯೆ ಯೋಜನೆಗಳ ಅನುಷ್ಠಾನದ ವಿಚಾರದಲ್ಲಿ ಹೊಂದಾಣಿಕೆ ಕಾಣಿಸುತ್ತಿಲ್ಲ. ಅನೇಕ ಕಡೆ ಗಲಾಟೆಗಳು ನಡೆದಿವೆ. ಇದು ಪಂಚಾಯತ್ ರಾಜ್ ವ್ಯವಸ್ಥೆ ಮೇಲೆಯೇ ಕರಿನೆರಳು ಆವರಿಸಲು ಕಾರಣವಾಗಿದೆ. ಇದಕ್ಕೆ ಅವಕಾಶ ನೀಡದೆ ಎಲ್ಲರೂ ಒಗಟ್ಟಿನಿಂದ ಜನಸೇವೆ ಮಾಡಬೇಕು ಎಂದು ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.