ADVERTISEMENT

ರಾಜ್ಯ ಸರ್ಕಾರದ ಕುಮ್ಮಕ್ಕಿನಂತೆ ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಶೋಭಾ

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 16:19 IST
Last Updated 4 ಜೂನ್ 2018, 16:19 IST
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ   

ಉಡುಪಿ: ದನದ ವ್ಯಾಪಾರಿ ಹುಸೇನಬ್ಬ ಅವರ ಅನುಮಾನಾಸ್ಪದ ಸಾವಿಗೂ, ಬಿಜೆಪಿ ಹಾಗೂ ಸಂಘ ಪರಿವಾರ ಸಂಘಟನೆಯ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ. ದನಗಳ ಕಳ್ಳಸಾಗಣೆ ಬಗ್ಗೆ ಮಾಹಿತಿ ನೀಡಿದವರನ್ನೇ ಬಂಧಿಸಿ, ದೌರ್ಜನ್ಯ ಎಸಗಲಾಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಬಿಜೆಪಿ ಶಾಸಕರು ಹಾಗೂ ಮುಖಂಡರ ಜತೆ ಸೋಮವಾರ ರಾತ್ರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರ ಕಚೇರಿಗೆ ತೆರಳಿ ಹುಸೇನಬ್ಬ ಪ್ರಕರಣ ಸಂಬಂಧ ಚರ್ಚಿಸಿದ ಬಳಿಕ ಅವರು ಮಾತನಾಡಿದರು.

‘ಪೆರ್ಡೂರಿನಲ್ಲಿ ಅಕ್ರಮವಾಗಿ ದನಗಳ ಕಳ್ಳಸಾಗಣೆ ಕುರಿತು ಪೊಲೀಸ್‌ ಇಲಾಖೆಗೆ ನಮ್ಮ ಕಾರ್ಯಕರ್ತರು ಮಾಹಿತಿ ನೀಡಿದ್ದರು. ಸ್ಥಳೀಯ ಎಸ್‌ಐ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ, ಹುಸೇನ‌ಬ್ಬ ಅವರನ್ನು ಠಾಣೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಆದರೂ, ರಾಜ್ಯ ಸರ್ಕಾರದ ಕುಮ್ಮಕ್ಕಿನಂತೆ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.

ADVERTISEMENT

ಹುಸೇನಬ್ಬ ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದ ಬಗ್ಗೆ ಮಾಹಿತಿ ಇದ್ದು, ಜೀಪಿನಲ್ಲಿ ಕರೆದೊಯ್ಯುವಾಗ ಹೃದಯಾಘಾತದಿಂದ ಸಾವನ್ನಪ್ಪಿರಬಹುದು. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿದು ಬರಲಿದೆ. ನಮ್ಮ ಕಾರ್ಯಕರ್ತರು ಯಾರ ಮೇಲೂ ಹಲ್ಲೆ ನಡೆಸಿಲ್ಲ. ಸುಖಾಸುಮ್ಮನೆ ಪ್ರಕರಣದಲ್ಲಿ ಥಳಕು ಹಾಕುವುದು ಸರಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದರು. 

ಪ್ರಕರಣದ ಹಿಂದೆ ರಾಜ್ಯಸರ್ಕಾರದ ಕೈವಾಡವಿದ್ದು, ಇದನ್ನು ಖಂಡಿಸಿ ಜೂನ್‌ 6ರಂದು ಉಡುಪಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.