ADVERTISEMENT

ರಾಷ್ಟ್ರಕವಿ ಜಿಎಸ್‌ಎಸ್‌ಗೆ ಮನೆಯಲ್ಲೇ ಸನ್ಮಾನ

​ಪ್ರಜಾವಾಣಿ ವಾರ್ತೆ
Published 2 ಜನವರಿ 2013, 19:59 IST
Last Updated 2 ಜನವರಿ 2013, 19:59 IST
ಬುಧವಾರ ಸಚಿವ ಗೋವಿಂದ ಕಾರಜೋಳ ಅವರಿಂದ ಜಿ.ಎಸ್.ಎಸ್‌ಗೆ ಸನ್ಮಾನ
ಬುಧವಾರ ಸಚಿವ ಗೋವಿಂದ ಕಾರಜೋಳ ಅವರಿಂದ ಜಿ.ಎಸ್.ಎಸ್‌ಗೆ ಸನ್ಮಾನ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ `ರಾಷ್ಟ್ರಕವಿಗಳ ಬದುಕು-ಬರಹ' ವಿಚಾರ ಸಂಕಿರಣದ ಹಿನ್ನೆಲೆಯಲ್ಲಿ ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರನ್ನು ಸ್ವಗೃಹದಲ್ಲಿ ಬುಧವಾರ  ಆತ್ಮೀಯವಾಗಿ ಸನ್ಮಾನಿಸಲಾಯಿತು.

ಜಿಎಸ್‌ಎಸ್ ಅವರನ್ನು ವಿಚಾರ ಸಂಕಿರಣದಲ್ಲಿ ಸನ್ಮಾನಿಸಲು ಉದ್ದೇಶಿಸಲಾಗಿತ್ತು. ಆದರೆ, ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಸನ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಸನ್ಮಾನಿಸಿ ಮಾತನಾಡಿ, `ಅನಾರೋಗ್ಯಪೀಡಿತರಾಗಿರುವ ಜಿಎಸ್‌ಎಸ್ ಅವರನ್ನು ನೋಡಿಕೊಳ್ಳುವ ವೈದ್ಯಕೀಯ ಸಹಾಯಕರಿಗೆ ಇಲಾಖೆ ವತಿಯಿಂದಲೇ ಗೌರವಧನ ನೀಡುವ ವ್ಯವಸ್ಥೆ ಮಾಡಿಕೊಡಲಾಗುವುದು.

ಕುಟುಂಬದವರೇ ಸಹಾಯಕರನ್ನು ನೇಮಿಸಿಕೊಳ್ಳಬೇಕು. ಜಿಎಸ್‌ಎಸ್ ಸಂಪೂರ್ಣ ಗುಣಮುಖರಾಗುವವರೆಗೆ ಇಲಾಖೆಯಿಂದ ಸಹಾಯಕರಿಗೆ ಗೌರವಧನ ನೀಡಲಾಗುವುದು. ವೈದ್ಯಕೀಯ ವೆಚ್ಚವನ್ನು ಇಲಾಖೆಯಿಂದ ಭರಿಸಲಾಗುವುದು' ಎಂದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಮಾತನಾಡಿ, ಜಿಎಸ್‌ಎಸ್ ಸ್ಫೂರ್ತಿಯಿಂದ ಈ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ' ಎಂದರು.ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್, ಗಾಯಕ ವೈ.ಕೆ.ಮುದ್ದುಕೃಷ್ಣ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಂಬಾತನಯ ಮುದ್ರಾಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.