ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು (ಎಎಪಿ) ಗಳಿಸಿರುವ ಬೆಂಬಲವು ದೇಶದ ಜನರ ಭಾವನೆಗಳನ್ನು ಸ್ಪಷ್ಟವಾಗಿ ಸೂಚಿಸುತ್ತಿದ್ದು, ಪ್ರಾದೇಶಿಕ ಪಕ್ಷಗಳು ಮುಂಬರುವ ಸಂದರ್ಭಕ್ಕೆ ಸಜ್ಜಾಗಬೇಕಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಹೇಳಿದರು.
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಎಎಪಿ ಎರಡು ವರ್ಷಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದ ರಾಜಕೀಯ ಪಕ್ಷ. ಆದರೂ ದೆಹಲಿಯಲ್ಲಿ ಗಣನೀಯ ಸಂಖ್ಯೆಯ ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ದೇಶದ ಜನತೆಯಲ್ಲಿ ಆಕ್ರೋಶ ಮಡುಗಟ್ಟಿದೆ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಮಹತ್ವದ ಪಾತ್ರ ವಹಿಸಿಲಿವೆ ಎಂಬುದನ್ನು ಈ ಫಲಿತಾಂಶ ಎತ್ತಿ ತೋರಿಸುತ್ತಿದೆ’ ಎಂದರು.
‘ನನ್ನ ಅಭಿಪ್ರಾಯದ ಪ್ರಕಾರ, ಈ ಚುನಾವಣೆಯಲ್ಲಿ ಯಾರು ಸೋತಿದ್ದಾರೆ? ಯಾರು ಗೆಲುವು ಸಾಧಿಸಿದ್ದಾರೆ ಎಂಬುದು ಮುಖ್ಯವಲ್ಲ. ಜಾತಿ ಮತ್ತು ಧರ್ಮ ಆಧಾರಿತ ರಾಜಕಾರಣ ಯಶಸ್ಸು ಸಾಧಿಸುವುದಿಲ್ಲ ಎಂಬುದೂ ಸಾಬೀತಾಗಿದೆ.
ಚುನಾವಣೆ ನಡೆದ ರಾಜ್ಯಗಳಲ್ಲಿ ರಾಷ್ಟ್ರೀಯ ಪಕ್ಷಗಳು ಉಚಿತವಾಗಿ ಅಕ್ಕಿ ವಿತರಣೆ, ವಿದ್ಯುತ್ ಪೂರೈಕೆಯಂತಹ ಯೋಜನೆಗಳನ್ನು ಜಾರಿಗೊಳಿಸಿದ್ದವು. ಆದರೂ, ಆ ಪಕ್ಷಗಳನ್ನು ಜನರು ಬೆಂಬಲಿಸಿಲ್ಲ. ಅಗ್ಗದ ಗಿಮಿಕ್ಗಳನ್ನೂ ತಿರಸ್ಕರಿಸಿದ್ದಾರೆ’ ಎಂದು ವಿಶ್ಲೇಷಿಸಿದರು.
ಈ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಭಾವ ಕುರಿತು ಪ್ರಶ್ನಿಸಿದಾಗ, ‘ದೆಹಲಿಯಲ್ಲಿ ಏಕೆ ಮೋದಿ ಪ್ರಭಾವ ಕೆಲಸ ಮಾಡಿಲ್ಲ ಎಂಬುದನ್ನು ತಿಳಿದುಕೊಳ್ಳಲಿ. ಇತರೆ ರಾಜ್ಯಗಳಲ್ಲಿ ಬಿಜೆಪಿಯ ಹೊರತಾದ ಪರ್ಯಾಯ ಇರಲಿಲ್ಲ. ಆದ್ದರಿಂದ ಅನಿವಾರ್ಯವಾಗಿ ಜನರು ಆ ಪಕ್ಷವನ್ನೇ ಬೆಂಬಲಿಸಿದ್ದಾರೆ’ ಎಂದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ರಾಜಕಾರಣದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ ದೇವೇಗೌಡರು, ‘ಜಾತಿ ಕಾರಣದಿಂದ ಲೋಕಸಭಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಲು ಸಾಧ್ಯವಿಲ್ಲ. ರಾಜ್ಯದಾದ್ಯಂತ ರೈತರು ಸಮಸ್ಯೆಯಲ್ಲಿ ನರಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.