ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಬಂಟ ಮೆಹಫೂಜ್ ಅಲಿಖಾನ್ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 27ರವರೆಗೆ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ಮಂಗಳವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು. ಏ.27ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಧೀಶರು, ಅಲ್ಲಿಯವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದರು.
ಖುದ್ದು ಹಾಜರಿಗೆ ಕೋರಿಕೆ: ವಿಚಾರಣೆ ಮುಗಿಯುವ ಹಂತದಲ್ಲಿ ನೇರವಾಗಿ ನ್ಯಾಯಾಧೀಶರ ಜೊತೆ ಮಾತನಾಡಲು ಅವಕಾಶ ನೀಡುವಂತೆ ಜನಾರ್ದನ ರೆಡ್ಡಿ ಮನವಿ ಮಾಡಿದರು. ಅದಕ್ಕೆ ಅವಕಾಶ ಕಲ್ಪಿಸಲಾಯಿತು. ಆಗ, ಏ.27ಕ್ಕೆ ಸುಪ್ರೀಂಕೋರ್ಟ್ನ ಹಿರಿಯ ವಕೀಲ ರಾಂಜೇಠ್ಮಲಾನಿ ತಮ್ಮ ಪರವಾಗಿ ವಾದ ಮಂಡಿಸಲಿದ್ದಾರೆ.
ಈ ಅವಧಿಯಲ್ಲಿ ತಮ್ಮ ಖುದ್ದು ಹಾಜರಿಗೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಮಾರ್ಚ್ 2ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯನ್ನು ನೆನಪಿಸಿಕೊಂಡ ನ್ಯಾಯಾಧೀಶರು, ಮತ್ತೆ ಇಂತಹ ಘಟನೆಗಳು ಮರುಕಳಿಸಿದರೆ ಎಂಬ ಆತಂಕ ವ್ಯಕ್ತಪಡಿಸಿದರು.
ಆದರೂ, ಖುದ್ದು ಹಾಜರುಪಡಿಸಲು ವ್ಯವಸ್ಥೆ ಮಾಡುವ ಕೋರಿಕೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.