ADVERTISEMENT

ರೈತರಿಗೆ ನಿರಂತರ ವಿದ್ಯುತ್‌ಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಮೇ 2012, 19:30 IST
Last Updated 3 ಮೇ 2012, 19:30 IST

ಬಾಗಲಕೋಟೆ:  ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು, ಸರ್ಕಾರಿ ಸೌಲಭ್ಯಗಳು ನೇರವಾಗಿ ಮುಟ್ಟಬೇಕು ಎನ್ನುವುದೂ ಸೇರಿದಂತೆ ವಿವಿಧ ನಿರ್ಣಯಗಳನ್ನು, ಗುರುವಾರ ಬಾಗಲಕೋಟೆಯಲ್ಲಿ ನಡೆದ ಕೃಷಿಕ ಸಮಾಜದ ರೈತರ ರಾಜ್ಯಮಟ್ಟದ ಸಮಾವೇಶದಲ್ಲಿ ಅಂಗೀಕರಿಸಲಾಯಿತು.

ಇಲ್ಲಿಯ ನವನಗರದ ಕಲಾಭವನದಲ್ಲಿ ಭಾರತೀಯ ಕೃಷಿಕ ಸಮಾಜವು ರೈತ ಸಂಘಟನೆಗಳ ಆಶ್ರಯದಲ್ಲಿ ಈ ಸಮಾವೇಶ ಏರ್ಪಡಿಸಿತ್ತು.ರೈತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು. ರೈತರಿಗೆ ನಿರಂತರವಾಗಿ ವಿದ್ಯುತ್ ಪೂರೈಸುವ  ಯೋಜನೆಯನ್ನು ಜಾರಿಗೆ ತರಬೇಕು.

ಸರ್ಕಾರದಿಂದ ರೈತರಿಗೆ ಕೊಡುವ ಸೌಲಭ್ಯಗಳು ನೇರವಾಗಿ ರೈತರಿಗೆ ಮುಟ್ಟಬೇಕು. ಮಧ್ಯವರ್ತಿಗಳ ಹಾವಳಿ ತಡೆಯಬೇಕು. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಕಾಲಕ್ಕೆ ಬೀಜ ಹಾಗೂ ಗೊಬ್ಬರ ಒದಗಿಸಬೇಕು. ರೈತರ ಹಕ್ಕು ಮತ್ತು ಭೂಮಿಯನ್ನು ಕಾಪಾಡಬೇಕು ಎಂಬುದೂ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಸಮಾವೇಶದಲ್ಲಿ ಕೈಗೊಳ್ಳಲಾಯಿತು.

ರಾಜ್ಯದಲ್ಲಿ 123 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಸರ್ಕಾರ ಘೋಷಣೆ ಮಾಡ್ದ್ದಿದರೂ ಇದುವರೆಗೆ  ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲಿ ಯಾವುದೇ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಂಡಿಲ್ಲ. ತಕ್ಷಣ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಪಡಿಸಲಾಯಿತು.

ಸಮಾವೇಶವನ್ನು ಕೃಷಿಕ ಸಮಾಜದ ರಾಷ್ಟ್ರ ಘಟಕದ ಅಧ್ಯಕ್ಷ ಡಾ.ಕಿಶನ್‌ಬೀರ್ ಚೌಧರಿ ಉದ್ಘಾಟಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ನವೀನಕುಮಾರ ಹೆಬ್ಬಳ್ಳಿ, ಮಾಜಿ ಶಾಸಕ ಪಿ.ಎಚ್.ಪೂಜಾರಿ, ಜಿ.ಪಂ.ಉಪಾಧ್ಯಕ್ಷ ಹೂವಪ್ಪ ರಾಠೋಡ, ಬಿಟಿಡಿಎ ಅಧ್ಯಕ್ಷ ಸಿ.ವಿ.ಕೋಟಿ,ಲಿಂಗರಾಜ ಪಾಟೀಲ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಬಿ.ದಂಡಿನ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.