ಬೆಂಗಳೂರು: ನಾಡಿನ ರೈತರ ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಬಲ್ಲ ಒಂದು ಲಕ್ಷಕ್ಕೂ ಹೆಚ್ಚಿನ ತಾಂತ್ರಿಕ ಆವಿಷ್ಕಾರಗಳ ಮಾಹಿತಿ ಟೆಕ್ಪೀಡಿಯಾ ((www.techpedia.in) ವೆಬ್ಸೈಟ್ನಲ್ಲಿ ದೊರೆಯುತ್ತಿದೆ.
ಇಲ್ಲಿ ವಿವರಿಸಲಾದ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದು. ಇದಕ್ಕೆ ಯಾರ ಪೂರ್ವಾನುಮತಿಯೂ ಬೇಕಿಲ್ಲ ಎಂದು ಅಹಮದಾಬಾದ್ನ `ಭಾರತೀಯ ಆಡಳಿತ ನಿರ್ವಹಣಾ ಸಂಸ್ಥೆ~ಯ (ಐಐಎಂ-ಎ) ಪ್ರೊ. ಅನಿಲ್ ಗುಪ್ತ ಹೇಳಿದರು.
ವಿಕಾಸಸೌಧದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ `ಗ್ರಾಮೀಣಾಭಿವೃದ್ಧಿ, ಕೃಷಿ, ಆಡಳಿತ ವಿಷಯದಲ್ಲಿ ಅವಿಷ್ಕಾರಗಳು~ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, `ದೇಶದ 500ಕ್ಕೂ ಹೆಚ್ಚಿನ ತಾಂತ್ರಿಕ ಕಾಲೇಜುಗಳ ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ಕ್ಷೇತ್ರಕ್ಕೆ ಅನುಕೂಲವಾಗಬಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದಾರೆ. ತಾಂತ್ರಿಕ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಸೇವೆಯನ್ನು ಕೃಷಿಯಂತಹ ಅಸಂಘಟಿತ ವಲಯದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು~ ಎಂದು ಸಲಹೆ ನೀಡಿದರು.
`ಗ್ರಾಮೀಣ ಭಾರತ ಎದುರಿಸುತ್ತಿರುವ ಅನೇಕ ಸವಾಲುಗಳಿಗೆ ರೈತ ಸಮುದಾಯದಲ್ಲೇ ಪರಿಹಾರ ಇದೆ~ ಎಂದ ಅವರು, `ಟೆಕ್ಪೀಡಿಯಾ ವೆಬ್ಸೈಟ್ನಲ್ಲಿರುವ ಮಾಹಿತಿಯನ್ನು ಕನ್ನಡಕ್ಕೆ ಅನುವಾದಿಸಬೇಕು. ಇದರಿಂದ ನಾಡಿನ ಎಲ್ಲ ರೈತರಿಗೂ ಅನುಕೂಲವಾಗುತ್ತದೆ~ ಎಂದು ಸರ್ಕಾರಕ್ಕೆ ಸಲಹೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರು, `ಇಲ್ಲಿಯವರೆಗೆ ನಾಡಿನ ಕೈಗಾರಿಕಾ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಆವಿಷ್ಕಾರಗಳನ್ನು ಅಭಿವೃದ್ಧಿಪಡಿಸಿದ್ದಾಯಿತು. ಇನ್ನಾದರೂ ಕೃಷಿ ಕ್ಷೇತ್ರ ಕುರಿತು ಗಮಹರಿಸಬೇಕು~ ಎಂದರು.
ಹೊಸ ಆವಿಷ್ಕಾರಗಳತ್ತ ಮುಖ ಮಾಡುವ ಪ್ರವೃತ್ತಿ ದೇಶದಲ್ಲಿ ಇನ್ನೂ ಬಾಲ್ಯಾವಸ್ಥೆಯಲ್ಲೇ ಇದೆ. ಪ್ರೊ. ಗುಪ್ತ ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.