ತುಮಕೂರು: ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದ ಪೊಲೀಸ್ ಸಬ್ಇನ್ಸ್ಪೆಕ್ಟರ್ಗೆ ಎರಡೂವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಇಲ್ಲಿನ ವಿಶೇಷ ಲೋಕಾಯುಕ್ತ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಶಿಕ್ಷೆಗೊಳಗಾದ ಕೆ.ಪಿ.ನಾಗರಾಜು 2008ರಲ್ಲಿ ಶಿರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಪ್ರಸ್ತುತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿವರ್ಹಿಸುತ್ತಿದ್ದಾರೆ.
ಶಮ್ಮು ಎಂಬಾತ ಶಿರಾದಲ್ಲಿ ರಸ್ತೆ ಬದಿ ಗುಜರಿ ಅಂಗಡಿ ತೆರೆಯಲು ಪೊಲೀಸರ ಅನುಮತಿ ಪಡೆಯಲು ಅರ್ಜಿ ಹಾಕಿದ್ದ. ಅರ್ಜಿ ಪರಿಶೀಲಿಸಿದ ನಾಗರಾಜು ಪ್ರತಿ ತಿಂಗಳು ಐದು ಸಾವಿರ ರೂಪಾಯಿ ಲಂಚ (ಮಾಮೂಲಿ) ನೀಡುವಂತೆ ಬೇಡಿಕೆ ಇಟ್ಟಿದ್ದರು. ಐದು ಸಾವಿರ ರೂಪಾಯಿ ಕೊಡುವುದು ಕಷ್ಟವಾಗುತ್ತದೆ ಎಂದು ಹೇಳಿ ಚೌಕಾಸಿ ನಡೆಸಿ ಪ್ರತಿ ತಿಂಗಳು ನಾಲ್ಕು ಸಾವಿರ ರೂಪಾಯಿಗೆ ಒಪ್ಪಿಸಿದ್ದ. ನಂತರ ಲೋಕಾಯುಕ್ತರಿಗೆ ದೂರು ನೀಡಿದ್ದ.
ಲೋಕಾಯಕ್ತ ಪೊಲೀಸರು ನಾಗರಾಜು ಲಂಚ ತೆಗೆದುಕೊಳ್ಳುತ್ತಿದ್ದಾಗ ಬಂಧಿಸಿ, ವಿಚಾರಣೆ ನಡೆಸಿ ಲೋಕಾಯುಕ್ತ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ತುಮಕೂರು ವಿಶೇಷ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರಯ್ಯ ಎರಡೂವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.