ಬೆಂಗಳೂರು: ಭ್ರಷ್ಟಾಚಾರ ಮತ್ತು ಭೂ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಶನಿವಾರ ನಗರದಲ್ಲಿ ಧರಣಿ ನಡೆಸಿತು.
ನಗರದ ಎಂ.ಜಿ.ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆ ಎದುರು ನಡೆದ ಧರಣಿಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತ ನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತ ಪೊಲೀಸರು ತನಿಖೆಗೆ ಸಿದ್ಧತೆ ನಡೆಸಿದ್ದರೆ. ಶೀಘ್ರದಲ್ಲಿ ಮುಖ್ಯ ಮಂತ್ರಿ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವ ಸಾಧ್ಯತೆ ಇದೆ.
ಆದ್ದರಿಂದ ಯಡಿಯೂ ರಪ್ಪ ಅವರು ಮುಖ್ಯ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ರಾಜ್ಯದ ಗೌರವ ಕಾಪಾಡಬೇಕು’ ಎಂದು ಒತ್ತಾಯಿಸಿದರು.ಹೈಕಮಾಂಡ್ ಬೆಂಬಲ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮಾತ ನಾಡಿ, ‘ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ದಿನಕ್ಕೊಂದು ಹಗ ರಣಗಳು ಬಯಲಾಗುತ್ತಿವೆ.
ಅವರ ರಾಜೀನಾಮೆ ಪಡೆಯಬೇಕಿದ್ದ ಬಿಜೆಪಿ ಹೈಕಮಾಂಡ್, ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಶಾಸಕ ರಾದ ಕೃಷ್ಣ ಭೈರೇಗೌಡ, ಆರ್. ರೋಷನ್ ಬೇಗ್, ದಿನೇಶ್ ಗುಂಡೂ ರಾವ್, ಎಂ. ಕೃಷ್ಣಪ್ಪ, ಕೆ.ಜೆ.ಜಾರ್ಜ್, ಎನ್.ಎ. ಹ್ಯಾರೀಸ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನಾಯ್ಡು ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.