ಹುಬ್ಬಳ್ಳಿ: ‘ರಾಜ್ಯದಲ್ಲಿ ಜನ ಬರಗಾಲದಿಂದ ತತ್ತರಿಸಿದ್ದಾರೆ. ಈಗ, ಅತಿಯಾದ ಮಳೆಯಿಂದಾಗಿ ಗೋಳಾಡುತ್ತಿದ್ದಾರೆ. ಅಲ್ಲದೆ, ರಾಜ್ಯದ ಹಣಕಾಸಿನ ಸ್ಥಿತಿಯೂ ಚೆನ್ನಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ವಿಧಾನಸೌಧದ ವಜ್ರಮಹೋತ್ಸವ ಆಚರಣೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿರುವುದು ಸರಿಯಲ್ಲ’ ಎಂದು ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ‘ಎರಡು ದಿನಗಳವರೆಗೆ ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹಾಸ್ಯಾಸ್ಪದ ಸಂಗತಿ. ದುಡ್ಡು ಹೇಗೆ ಖರ್ಚು ಮಾಡಬೇಕೆನ್ನುವ ಕಾರ್ಯಕ್ರಮಗಳು ಮಾತ್ರ ಇವರಿಗೆ ಕಾಣುತ್ತವೆ. ಜನರ ಕಷ್ಟಗಳನ್ನು ನಿವಾರಣೆ ಮಾಡಿ, ಅವರನ್ನು ಸುಖದಿಂದ ಇರಿಸಬೇಕೆನ್ನುವ ಚಿಂತನೆ ಮಾಡುತ್ತಿಲ್ಲ. ಬೆಳ್ಳಿ, ಬಂಗಾರ ಉಡುಗೊರೆ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡುವುದು ಸರಿಯಲ್ಲ. ಇವರಿಗೆ ಬುದ್ಧಿ ಹೇಳುವವರು ಯಾರೂ ಇಲ್ಲದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಮುಖ್ಯಮಂತ್ರಿ ಸಿದ್ಧರಾಮಯ್ಯ ದುಂದುವೆಚ್ಚಕ್ಕೆ ಅವಕಾಶ ಮಾಡಿಕೊಡಬಾರದು. ಜನತೆಯ ಮುಖ್ಯಮಂತ್ರಿ ಎನ್ನುವುದನ್ನು ಅವರು ತೋರಿಸಿಕೊಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.