ಬೆಂಗಳೂರು: `ರಾಜ್ಯದಲ್ಲಿ ಬರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ವಿದೇಶ ಪ್ರವಾಸ ರದ್ದುಗೊಳಿಸಿದ್ದೇನೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಘಟಿಕೋತ್ಸವದಲ್ಲಿ ಪಾಲ್ಗೊಂಡ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, `ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಈಗ ವಿದೇಶಕ್ಕೆ ತೆರಳುವುದು ಸಮಂಜಸವಲ್ಲ ಎಂದು ತೀರ್ಮಾನಿಸಿ ಪ್ರವಾಸ ಕೈಬಿಡಲಾಗಿದೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸಮಾವೇಶದಲ್ಲಿ ಭಾಗವಹಿಸುವರು~ ಎಂದು ಸ್ಪಷ್ಟಪಡಿಸಿದರು.
`ಪ್ರವಾಸ ಕೈಗೊಂಡರೆ ಅಪಾರ್ಥಕ್ಕೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ. ಬರಪೀಡಿತ ಪ್ರದೇಶಗಳಿಗೆ ತೆರಳಿದ ಸಚಿವರು ಮಧ್ಯಂತರ ವರದಿ ಸಲ್ಲಿಸಿದ್ದಾರೆ~ ಎಂದು ಅವರು ತಿಳಿಸಿದರು.
`ನನಗೆ ಯಾರೂ ಸಲಹೆಗಾರರೂ ಇಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇನೆ. ಆತ್ಮಸಾಕ್ಷಿಯೇ ನನಗೆ ಸಲಹೆಗಾರ~ ಎಂದರು.
`ರಾಜ್ಯಪಾಲರಿಗೆ ಎರಡು ರಾಜ್ಯದ ಹೊಣೆಗಾರಿಕೆ ಇದೆ. ಅನಿವಾರ್ಯ ಕಾರಣಗಳಿಂದ ರಾಜ್ಯಪಾಲರು ಘಟಿಕೋತ್ಸವದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಎಲ್ಲ ತುರ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದೇನೆ. ರಾಜ್ಯಪಾಲರ ಗೈರುಹಾಜರಿಗೆ ಅಪಾರ್ಥ ಕಲ್ಪಿಸುವುದು ಬೇಡ. ಈ ಹಿಂದೆಯೂ ಮೈಸೂರು ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದೆ. ಗೌರವ ಡಾಕ್ಟರೇಟ್ ವಿವಾದದ ಕುರಿತು ತಮಗೇನು ಹೆಚ್ಚು ಮಾಹಿತಿ ಇಲ್ಲ~ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.