ADVERTISEMENT

ವಿದ್ಯುತ್ ಪ್ರಸರಣ ವ್ಯವಸ್ಥೆಗೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2012, 19:30 IST
Last Updated 12 ಅಕ್ಟೋಬರ್ 2012, 19:30 IST

ರಾಯಚೂರು:  ರಾಯಚೂರು- ಸೋಲಾಪುರ 765 ಕೆ.ವಿ ವಿದ್ಯುತ್ ಪ್ರಸರಣ ವ್ಯವಸ್ಥೆಯು ದಕ್ಷಿಣ ಭಾರತದ ರಾಜ್ಯಗಳ ಹೊಸ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಆಗಲಿದೆ. 2013 ಡಿಸೆಂಬರ್‌ನೊಳಗೆ ಈ ಕಾರ್ಯ ಪೂರ್ಣಗೊಂಡು 2014ರ ಜನವರಿಯಲ್ಲಿ ಉದ್ಘಾಟಿಸಲು ಕಾಲ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಇಂಧನ ಖಾತೆ ಸಚಿವ ಎಂ. ವೀರಪ್ಪ ಮೊಯಿಲಿ  ಹೇಳಿದರು.

ರಾಯಚೂರು-ಸೋಲಾಪುರ 765 ಕೆ.ವಿ. ವಿದ್ಯುತ್ ಪ್ರಸರಣ ವ್ಯವಸ್ಥೆ ಶಂಕುಸ್ಥಾಪನೆಯು ದಕ್ಷಿಣ ಭಾರತದಲ್ಲಿ ಚರಿತ್ರಾರ್ಹ ಕಾರ್ಯಕ್ರಮವಾಗಿದೆ. ಒಟ್ಟು 1,930 ಕೋಟಿ ವೆಚ್ಚದ ಈ ಕಾಮಗಾರಿಯನ್ನು ಜಗತ್ತಿನಲ್ಲಿಯೇ ವಿದ್ಯುತ್ ಪ್ರಸರಣ ಜಾಲದಲ್ಲಿ ಪ್ರತಿಷ್ಠಿತ ಮೂರು ಕಂಪೆನಿಗಳಲ್ಲೊಂದಾದ ಪವರ್ ಗ್ರಿಡ್ ಕಾರ್ಪೊರೇಶನ್ ಸಂಸ್ಥೆಯು ವಹಿಸಿಕೊಂಡಿದೆ ಎಂದು ಹೇಳಿದರು.

11ನೇ ಪಂಚವಾರ್ಷಿಕ ಯೋಜನೆಯಲ್ಲಿ 54,000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಿದ್ದರೆ 12ನೇ ಪಂಚವಾರ್ಷಿಕ ಯೋಜನೆಯಲ್ಲಿ 88,000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಬೇಕಿದೆ. ಸದ್ಯ ರಾಷ್ಟ್ರದಲ್ಲಿ 92,000 ಮೆವಾ ವಿದ್ಯುತ್ ಉತ್ಪಾದನೆ ಗುರಿ ಸಾಧನೆ ಕಾರ್ಯ ಪ್ರಗತಿಯಲ್ಲಿದೆ. ಸ್ಥಾವರಗಳ ಕಾರ್ಯ ಚುರುಕಿನಿಂದ ನಡೆದಿದೆ. ಅದಕ್ಕೆ ತಕ್ಕಂತೆ ಪ್ರಸರಣ ವ್ಯವಸ್ಥೆಯ ಸುಧಾರಣೆಗೆ ಆದ್ಯತೆ ನೀಡಲಾಗಿದೆ.

ಅದರ ಅಂಗವಾಗಿ ಈ ವಿದ್ಯುತ್ ಪ್ರಸರಣ ವ್ಯವಸ್ಥೆ ಸುಧಾರಣೆ ಕಾರ್ಯ, ಉಪ ಕೇಂದ್ರ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಹೇಳಿದರು.ದೇಶದ ಇತರ ರಾಜ್ಯಗಳಲ್ಲಿ ವಿದ್ಯುತ್ ಉತ್ಪಾದನೆ ಆದರೂ ದಕ್ಷಿಣ ಭಾರತದ ರಾಜ್ಯಗಳಿಗೆ ವಿದ್ಯುತ್ ಸರಬರಾಜು ಮಾಡಲು ಪ್ರಸರಣ ಮಾರ್ಗ ಸಮಸ್ಯೆಯಿಂದ ಸಾಧ್ಯವಾಗುತ್ತಿರಲಿಲ್ಲ. ಆ ಸಮಸ್ಯೆಯನ್ನು ಮುಂಬರುವ ದಿನಗಳಲ್ಲಿ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

`ರಾಜ್ಯವು ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಎಲ್ಲ ರೀತಿಯ ಕ್ರಮಗಳನ್ನು ಅನುಸರಿಸುತ್ತಿದೆ. ಯರಮರಸ್, ಯದ್ಲಾಪುರ, ಬಳ್ಳಾರಿ, ಛತ್ತೀಸಗಡದಲ್ಲಿ ಶಾಖೋತ್ಪನ್ನ ವಿದ್ಯುತ್ ಸ್ಥಾವರ ನಿರ್ಮಾಣ ಮಾಡಿ 3,100 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಕಾರ್ಯ ಚಟುವಟಿಕೆ ಆರಂಭಿಸಿದೆ.

ಕೇಂದ್ರ ಸರ್ಕಾರ ಕಲ್ಲಿದ್ದಲು ಲಿಂಕೇಜ್ ಕಲ್ಪಿಸದೇ ಇರುವುದರಿಂದ ಹಿನ್ನಡೆ ಆಗಿದೆ. ರಾಜ್ಯದವರೇ ಆದ ಕೇಂದ್ರ ಇಂಧನ ಖಾತೆ ಸಚಿವರು ಇದಕ್ಕೆ ಸ್ಪಂದಿಸಬೇಕು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.