ಚಿತ್ರದುರ್ಗ: ಈ ಬಾರಿಯ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಜಯ ಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ವರದಿಗಾರರೊಂದಿಗೆ ಮಾತನಾಡಿದ ಅವರು, ‘ಉತ್ತರ ಪ್ರದೇಶದಲ್ಲಿ ಬಿಜೆಪಿ ಹಳಸಿದೆ. ಹೀಗಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಹಿಂದುತ್ವ ಭಾಷಣ ಮಾಡುತ್ತಾರೆ. ಅಲ್ಲೇ ಹಿಂದುತ್ವದ ಮೋಡಿ ನಡೆದಿಲ್ಲ. ಇನ್ನು ಇಲ್ಲಿ ನಡೆಯುತ್ತದೆಯಾ? ಅದು ಸಾಧ್ಯವಿಲ್ಲ. ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಈ ವಿಧಾನಸಭೆಯನ್ನೂ ನಾವು ಗೆಲ್ಲುತ್ತೇವೆ. ಮುಂದಿನ ಲೋಕಸಭೆಯಲ್ಲೂ ಕಾಂಗ್ರೆಸ್ ಪಕ್ಷವೇ ಗೆದ್ದು ಬೇರೆ ಪಕ್ಷಗಳ ಸಹಕಾರದಿಂದ ಸರ್ಕಾರ ರಚನೆ ಮಾಡಲಿದೆ’ ಎಂದು ಹೇಳಿದರು.
‘ಅಲ್ಲಿ ಸಲ್ಲದವರು ಇಲ್ಲಿ ಸಲ್ಲರಯ್ಯಾ’: ‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರಿನಲ್ಲೇ ಬಿಜೆಪಿ ಸೋತಿದೆ. ಇನ್ನು ಅವರು ಕರ್ನಾಟದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತಾರಾ? ಅಲ್ಲಿ ಸಲ್ಲದವರು ಇಲ್ಲಿ ಸಲ್ಲರಯ್ಯ, ಇಲ್ಲಿ ಸಲ್ಲುವರು ಅಲ್ಲೂ ಸಲ್ಲುವರಯ್ಯ...’ ಎಂದು ಸಿದ್ದರಾಮಯ್ಯ ಹೇಳಿದರು.
ಸಚಿವರ ಮಕ್ಕಳಿಗೆ ಟಿಕೆಟ್ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಇನ್ನೂ ನನ್ನ ಪುತ್ರ ಟಿಕೆಟ್ ಕೇಳಿಯೇ ಇಲ್ಲ. ಜನಾಪೇಕ್ಷೆ ಮೇರೆಗೆ ಚುನಾವಣ ಕಣಕ್ಕಿಳಿಯುವ ಬಗ್ಗೆ ತೀರ್ಮಾನಿಸಲಾಗುತ್ತದೆ. ವೀಕ್ಷಕರ ಸಮೀಕ್ಷೆಯ ಮೇರೆಗೆ ಹೈಕಮಾಂಡ್ ಟಿಕೆಟ್ ನೀಡುತ್ತದೆ. ಟಿಕೆಟ್ ಕೇಳಲು ಎಲ್ಲರಿಗೂ ಹಕ್ಕಿದೆ’ ಎಂದು ಹೇಳಿದರು. ತನ್ಮೂಲಕ ಮಗನನ್ನು ಚುನಾವಣಾ ಕಣಕ್ಕಿಳಿಯುವ ಸೂಚನೆಯನ್ನು ಮತ್ತಷ್ಟು ಬಲಗೊಳಿಸಿದರು.
ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೆಲವು ಮಠಾಧೀಶರು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.