ಮಂಡ್ಯ: ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಚಲುವನಾರಾಯಣ ಸ್ವಾಮಿಯ ವಿಶ್ವವಿಖ್ಯಾತ ವೈರಮುಡಿ ಉತ್ಸವ ಸೋಮವಾರ ರಾತ್ರಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಸೋಮವಾರ ಬೆಳಿಗ್ಗೆ 6 ಗಂಟೆಗೆ ನಗರದ ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣ ಪೆಟ್ಟೆಗೆಗೆ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಪೂಜೆ ಸಲ್ಲಿಸಿ ವೈರಮುಡಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಲಕ್ಷ್ಮಿ ಜನಾರ್ದನ ದೇವಾಲಯದಲ್ಲಿ ವೈರಮುಡಿ ಪೆಟ್ಟಿಗೆ ಇಟ್ಟು ಪೂಜೆ ಸಲ್ಲಿಸಿದ ನಂತರ ಮೇಲುಕೋಟೆ ಮಾರ್ಗ ಮಧ್ಯೆ 80ಕ್ಕೂ ಹೆಚ್ಚು ಹಳ್ಳಿಗಳ ಜನರು ಪೂಜೆ ಸಲ್ಲಿಸಲಿದ್ದಾರೆ.
ಸೋಮವಾರ ಸಂಜೆ ಪೊಲೀಸ್ ಭದ್ರತೆಯೊಂದಿಗೆ ವೈರಮುಡಿ ಮೆರವಣಿಗೆ ಮೇಲುಕೋಟೆ ತಲುಪಲಿದೆ. ಪಾಂಡವಪುರ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಚಲುವನಾರಾಯಣಸ್ವಾಮಿ ದೇವಾಲಯದ ಸ್ಥಾನಿಕರು ಮೆರವಣಿಗೆಯ ನೇತೃತ್ವ ವಹಿಸುವರು.
ರಾತ್ರಿ ಚಲುವನಾರಾಯಣಸ್ವಾಮಿ ದೇವಾಲಯದಲ್ಲಿರುವ ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.