ADVERTISEMENT

ಶಾಲೆಗಳಿಗೆ ನೇತಾಜಿ ಜೀವನಚರಿತ್ರೆಪುಸ್ತಕ

​ಪ್ರಜಾವಾಣಿ ವಾರ್ತೆ
Published 23 ಜನವರಿ 2011, 20:10 IST
Last Updated 23 ಜನವರಿ 2011, 20:10 IST

ಬೆಂಗಳೂರು: ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಚರಿತ್ರೆಯ ಪುಸ್ತಕಗಳನ್ನು ಖರೀದಿ ಮಾಡಿ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಂಚಲು ಒಂದು ಕೋಟಿ ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಇಲ್ಲಿ ತಿಳಿಸಿದರು.

ಸುಭಾಷ್ ಚಂದ್ರ ಬೋಸ್ ಅವರ 114ನೇ ಜನ್ಮದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಅವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ‘ಇಂದಿನ ಯುವ ಪೀಳಿಗೆ ಅದರಲ್ಲೂ ಶಾಲಾ ಮಕ್ಕಳು ಬೋಸ್ ಅವರ ದೇಶಭಕ್ತಿ, ನಾಯಕತ್ವದ ಗುಣಗಳನ್ನು ಓದಿ ತಿಳಿದುಕೊಳ್ಳುವುದಲ್ಲದೆ ಆ ಮಾರ್ಗದಲ್ಲಿ ಸಾಗಬೇಕು ಎಂದರು.

ದೇಶಕ್ಕಾಗಿ ಹೋರಾಟ ನಡೆಸಿದ ಅಪ್ರತಿಮ ನಾಯಕನ ಜೀವನ ಚರಿತ್ರೆ ಪುಸ್ತಕ ಎಲ್ಲ ಮಾಧ್ಯಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಲಭ್ಯವಾಗಬೇಕು. ಈ ಉದ್ದೇಶದಿಂದ ಸರ್ಕಾರ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪುಸ್ತಕಗಳನ್ನು ಖರೀದಿಸಿ ಶಾಲೆಗಳಿಗೆ ಹಂಚಲಿದೆ ಎಂದು ತಿಳಿಸಿದರು.

 ‘ಅವರಲ್ಲಿದ್ದ ರಾಷ್ಟ್ರಪ್ರೇಮ, ದೇಶಭಕ್ತಿ ಮತ್ತು ನಾಯಕತ್ವದ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಇಂದಿನ ಕಲುಷಿತ ರಾಜಕಾರಣದಲ್ಲಿ ಅಂತಹ ನಾಯಕನ ಅಗತ್ಯವಿದೆ’ ಎಂದು ಹೇಳಿದರು. ಸಚಿವರಾದ ಮುರುಗೇಶ್ ನಿರಾಣಿ, ಸಿ.ಎಚ್.ವಿಜಯ ಶಂಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.