ಬೆಂಗಳೂರು: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಿಂದುತ್ವ ಸಂಘಟನೆಗಳಿಗೆ ಸೂಚಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಲಾಟೆ ನಿಂತು ಹೋಗಲಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಜಿ. ಪರಮೇಶ್ವರ ಹೇಳಿದರು.
ಪಕ್ಷದ ಕಚೇರಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ರಾಜಕೀಯ ಕಾರಣಕ್ಕೆ ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು, ತಮ್ಮ ಸಂಘ ಸಂಸ್ಥೆಗಳಿಗೆ ತಿಳಿಹೇಳುವ ಕೆಲಸವನ್ನು ಅವರು ಮೊದಲು ಮಾಡಲಿ’ ಎಂದರು.
‘ದಕ್ಷಿಣ ಕನ್ನಡದಲ್ಲಿ ಕೋಮು ಗಲಭೆ ಹೆಚ್ಚಾಗಲು ಬಿಜೆಪಿ ಕಾರಣ ಎಂದು ಅಲ್ಲಿನ ಮುಖಂಡರೇ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್, ಬಜರಂದಳ, ಶ್ರೀರಾಮಸೇನೆಯನ್ನು ನಿಷೇಧಿಸಬೇಕು ಎಂಬ ಒತ್ತಾಯವೂ ಕೇಳಿಬಂದಿವೆ. ಇದನ್ನು ಕಾಂಗ್ರೆಸ್ ಹೇಳುತ್ತಿಲ್ಲ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದು, ಗಲಭೆ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ’ ಎಂದರು.
‘ಮುಖ್ಯಮಂತ್ರಿಗಳೇ ಗೃಹ ಖಾತೆ ನಿರ್ವಹಿಸುತ್ತಿದ್ದು, ನೇರವಾಗಿ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಸಭೆಯನ್ನೂ ನಡೆಸಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.